ಬೀದರ್: ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘ (ಕೆಕೆಎಚ್ಆರ್ಎಸಿಎಸ್) ಇಲ್ಲಿಯ ಸಿದ್ಧಾರ್ಥ ಪ್ರೌಢಶಾಲೆಯಲ್ಲಿ 250 ಲೀಟರ್ ಸಾಮರ್ಥ್ಯದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿದೆ.
ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಘಟಕವನ್ನು ಉದ್ಘಾಟಿಸಿದರು.
ಅಶುದ್ಧ ನೀರು ಅನೇಕ ಕಾಯಿಲೆಗಳಿಗೆ ಕಾರಣವಾಗುತ್ತದೆ. ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ಶುದ್ಧ ನೀರು ಪ್ರತಿಯೊಬ್ಬರಿಗೂ ಅಗತ್ಯವಾಗಿದೆ ಎಂದು ಅವರು ಹೇಳಿದರು.
ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೆಕೆಎಚ್ಆರ್ಎಸಿಎಸ್ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಮಾತನಾಡಿ, ಸಂಘದಿಂದ ಶಾಲಾ ಕಾಲೇಜು, ಧಾರ್ಮಿಕ, ಐತಿಹಾಸಿಕ ತಾಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 100 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ ಎಂದು ಹೇಳಿದರು.
ಈಗಾಗಲೇ 16 ಕಡೆಗಳಲ್ಲಿ ಘಟಕಗಳನ್ನು ಸ್ಥಾಪಿಸಿ, ವಿದ್ಯಾರ್ಥಿಗಳು, ಭಕ್ತರು, ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಸಂಘವು ಈ ಭಾಗದ ಅಭಿವೃದ್ಧಿಗೆ ಪೂರಕವಾಗಿ ವಿವಿಧ ಚಟುವಟಿಕೆಗಳನ್ನು ನಡೆಸುತ್ತಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸುವ ದಿಸೆಯಲ್ಲಿ ಶಾಲಾ ಕಾಲೇಜುಗಳಿಗೆ ವಿವಿಧ ಸಾಮಗ್ರಿಗಳನ್ನು ವಿತರಿಸುತ್ತಿದೆ ಎಂದು ಹೇಳಿದರು.
ಬಿಜೆಪಿ ಎಸ್.ಸಿ. ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿ ಜಯಕುಮಾರ ಕಾಂಗೆ ಮಾತನಾಡಿದರು. ಸಿದ್ಧಾರ್ಥ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಎಸ್. ಪ್ರಭು ಅಧ್ಯಕ್ಷತೆ ವಹಿಸಿದ್ದರು. ಸಂಘದ ಬೀದರ್ ತಾಲ್ಲೂಕು ಸಂಯೋಜಕ ಗಣಪತಿ ಹಡಪದ ಇದ್ದರು. ಶಿಕ್ಷಕ ವಿಜಯಕುಮಾರ ನಿರೂಪಿಸಿದರು.