ಬೀದರ್: ಕೋವಿಡ್ ಪ್ರಕರಣಗಳು ತಗ್ಗಿರುವ ಪ್ರಯುಕ್ತ ’ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ಅಕ್ಟೋಬರ್ 16ರಂದು ಶನಿವಾರ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ (ಕೆ) ಗ್ರಾಮದಲ್ಲಿ ನಡೆಯಲಿದೆ.
ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಕಡತಗಳ ವಿಲೇವಾರಿ ಮಾಡುವರು. ಸಂಜೆ 5 ಗಂಟೆಗೆ ವೇದಿಕೆ ಕಾರ್ಯಕ್ರಮದಲ್ಲಿ ಶಾಸಕರು ಸೇರಿದಂತೆ ಜನಪ್ರತಿನಿಧಿಗಳು ಪಾಲ್ಗೊಳ್ಳುವರು.
ಆಡಳಿತವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯಬೇಕು ಎನ್ನುವ ಸರಕಾರದ ಆಶಯದಂತೆ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಪುನಾರಂಭವಾಗಿದೆ. ಅಂದು ಅಧಿಕಾರಿಗಳು ಗ್ರಾಮದಲ್ಲಿ ಜನರ ಅಹವಾಲುಗಳನ್ನು ಆಲಿಸುವರು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕಂದಾಯ, ಭೂ ಮಾಪನ ಹಾಗೂ ಭೂ ದಾಖಲೆಗಳ ಇಲಾಖೆ, ಕೃಷಿ, ತೋಟಗಾರಿಕೆ, ಆಹಾರ, ಲೋಕೋಪಯೋಗಿ, ಹೆಸ್ಕಾಂ, ಪಶುಪಾಲನೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗುವರು.
ಪ್ರತಿ ತಿಂಗಳು ಮೂರನೇ ಶನಿವಾರ:
ರಾಜ್ಯ ಸರಕಾರದ ನಿರ್ದೇಶನದಂತೆ ಪ್ರತಿ ತಿಂಗಳು ಮೂರನೇ ಶನಿವಾರ ಜಿಲ್ಲಾಧಿಕಾರಿ ಒಂದು ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಪರಿಹರಿಸುವುದೇ ಈ ಕಾರ್ಯಕ್ರಮದ ವಿಶೇಷತೆಯಾಗಿದೆ.
2020ರ ಫೆಬ್ರುವರಿ 22ರಂದು ಕಮಲನಗರ ತಾಲ್ಲೂಕಿನ ಸಂಗಮ ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಮಾಡಿದ್ದರು.
ಗ್ರಾಮದ ಪಹಣಿಯಲ್ಲಿನ ದೋಷಗಳನ್ನು ಸರಿಪಡಿಸುವುದು, ಪೌತಿ ಹೊಂದಿದ ಖಾತೆದಾರರ ಹೆಸರನ್ನು ಪಹಣಿಯ ಕಾಲಂ 9 ರಿಂದ ತೆಗೆದು ನೈಜ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮ ವಹಿಸುವುದು, ಗ್ರಾಮದ ಎಲ್ಲ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸುವುದು, ಬಿಟ್ಟು ಹೋದಂತಹ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡುವುದು, ಗ್ರಾಮದಲ್ಲಿ ಸ್ಮಶಾನ ಲಭ್ಯತೆ ಬಗ್ಗೆ ಪರಿಶೀಲಿಸುವುದು ಮಾಡಲಿದ್ದಾರೆ. ಸ್ಮಶಾನವಿಲ್ಲದಿದ್ದಲ್ಲಿ ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳಲಿದ್ದಾರೆ.
ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸುವುದು, ಆಧಾರ್ ಕಾರ್ಡಿನ ಅನುಕೂಲತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಆನ್ಲೈನ್ ಮುಖಾಂತರ ನಾಡಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಜಾಗೃತಿ ಮೂಡಿಸುವುದು, ಮತದಾರರ ಪಟ್ಟಿ ಪರಿಷ್ಕರಣೆ, ಬರ, ಪ್ರವಾಹ ಇದ್ದಲ್ಲಿ ಪರಿಹಾರ, ಪ್ರವಾಹದ ಹಾನಿ ತಡೆಗಟ್ಟಲು ಸಲಹೆ ನೀಡುವುದು,
ಕಂದಾಯ ಗ್ರಾಮಗಳ ರಚನೆ, ಗ್ರಾಮದಲ್ಲಿ ಎಸ್.ಸಿ.ಎಸ್.ಟಿ. ಬಿ.ಸಿ.ಎಂ. ವಸತಿ ನಿಲಯ, ಶಾಲೆ ಹಾಗೂ ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲಿಸುವರಯ, ಎಲ್ಲ ಅರ್ಹ ಬಡ ಕುಟುಂಬಗಳಿಗೆ ಬಿ.ಪಿ.ಎಲ್ ಕಾರ್ಡ್ ದೊರೆತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವರು.
ತಹಶೀಲ್ದಾರ್ರಿಂದಲೂ ಗ್ರಾಮ ವಾಸ್ತವ್ಯ
ಔರಾದ್ ತಾಲ್ಲೂಕಿನ ಬರ್ದಾಪುರ, ಕಮಲನಗರ ತಾಲ್ಲೂಕಿನ ಹಂದೀಕೇರಾ, ಬೀದರ್ ತಾಲ್ಲೂಕಿನ ರಾಜನಾಳ, ಭಾಲ್ಕಿ ತಾಲ್ಲೂಕಿನ ಆಳಂದಿ, ಚಿಟಗುಪ್ಪ ತಾಲ್ಲೂಕಿನ ಮದರಗಿ, ಬಸವಕಲ್ಯಾಣ ತಾಲ್ಲೂಕಿನ ಏಕಂಬಾ ಹಾಗೂ ಹುಲಸೂರ ತಾಲ್ಲೂಕಿನ ತೊಗಲೂರ ಗ್ರಾಮಗಳಲ್ಲಿ ಅಕ್ಟೋಬರ್ 16ರಂದು ಆಯಾ ತಹಶೀಲ್ದಾರರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.