ಬೀದರ್: ವಯೋನಿವೃತ್ತಿ ಹೊಂದಿದ ಇಲ್ಲಿಯ ಜೀಜಾಮಾತಾ ಪ್ರೌಢಶಾಲೆಯ ಶಿಕ್ಷಕ ಅಂಬಾದಾಸ ಜಾನಾಪೂರೆ ಅವರನ್ನು ಶಾಲೆಯಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಶಿವ ಛತ್ರಪತಿ ಸ್ಮಾರಕ ಸಮಿತಿ ಅಧ್ಯಕ್ಷ ಸತೀಶ ಮುಳೆ ಮಾತನಾಡಿ, ಅಂಬಾದಾಸ ಜಾನಾಪೂರೆ ಅವರ ಸೇವಾ ನಿಷ್ಠೆ, ಪ್ರಾಮಾಣಿಕತೆ ಹಾಗೂ ಸಮಯ ಪ್ರಜ್ಞೆ ಎಲ್ಲರಿಗೆ ಮಾದರಿಯಾಗಿದೆ ಎಂದು ತಿಳಿಸಿದರು.
ಸಮಾಜದಲ್ಲಿ ಶಿಕ್ಷಕರಿಗೆ ಬಹಳ ಗೌರವ ಇದೆ. ಶಿಕ್ಷಕರು ತಮ್ಮ ವೃತ್ತಿಯನ್ನು ಪ್ರೀತಿಸಬೇಕು ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸಬೇಕು ಎಂದು ಸಲಹೆ ಮಾಡಿದರು.
ಈಚೆಗೆ ನಿಧನರಾದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಲ್ಲಪ್ಪ ಹೂಗಾಡೆ ಅವರು ಸರಳ, ಸಜ್ಜನ ವ್ಯಕ್ತಿಯಾಗಿದ್ದರು. ಸಂಸ್ಥೆಗೆ ಅವರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.
ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ಗೀತಾ ಗಡ್ಡಿ ಸಸಿಗೆ ನೀರೆರೆದು ಕಾರ್ಯಕ್ರಮ ಉದ್ಘಾಟಿಸಿದರು. ಮಲ್ಲಪ್ಪ ಹೂಗಾಡೆ ಅವರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷಗಳ ಮೌನ ಆಚರಿಸಲಾಯಿತು.