ಬೀದರ್: ರಾಜ್ಯ ಸರ್ಕಾರದ ವತಿಯಿಂದಲೇ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆಗೆ ಆದೇಶ ಹೊರಡಿಸಿದ್ದಕ್ಕೆ ದಕ್ಷಿಣ ಭಾರತದ ವಿವಿಧ ರಾಜ್ಯಗಳ ವೀರಶೈವ ಲಿಂಗಾಯತ ಸಮಾಜದ ಪ್ರತಿನಿಧಿಗಳು ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲಕುಮಾರ್ ಅವರನ್ನು ಸನ್ಮಾನಿಸಿದರು.
ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಅವರ ನೇತೃತ್ವದಲ್ಲಿ ಶಾಲು ಹೊದಿಸಿ ಸತ್ಕರಿಸಿದರು.
‘ಸರ್ಕಾರದ ವತಿಯಿಂದಲೇ ರೇಣುಕಾಚಾರ್ಯರ ಜಯಂತಿ ಆಚರಿಸಬೇಕು ಎನ್ನುವುದು ಬಹುದಿನಗಳ ಬೇಡಿಕೆಯಾಗಿತ್ತು. ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿ ರೇಣುಕಾಚಾರ್ಯರಿಗೆ ಗೌರವ ಸಲ್ಲಿಸಿದೆ’ ಎಂದು ಶಿವಯ್ಯ ಸ್ವಾಮಿ ಹೇಳಿದರು.
ರಾಜ್ಯ ಸರ್ಕಾರದ ಕ್ರಮದಿಂದಾಗಿ ವೀರಶೈವ ಲಿಂಗಾಯತರಲ್ಲಿ ಸಂತಸ ಮೂಡಿದೆ. ಸರ್ಕಾರದ ವತಿಯಿಂದ ಜಯಂತಿ ಆಚರಣೆಯಿಂದ ಜಗದ್ಗುರು ರೇಣುಕಾಚಾರ್ಯರ ಸಮಾಜೋಧಾರ್ಮಿಕ ಕಾರ್ಯಗಳ ಬಗ್ಗೆ ಜನಸಾಮಾನ್ಯರಲ್ಲಿ ಇನ್ನಷ್ಟು ಅರಿವು ಮೂಡಲಿದೆ ಎಂದು ಆಶಯ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ತೆಲಂಗಾಣದ ವಾರಂಗಲ್ನ ನಗರಸಭೆ ಸದಸ್ಯ ಭದ್ರಯ್ಯ ಕೋಲನಪಾಕ್, ಜಹೀರಾಬಾದ್ನ ನಾಗಯ್ಯ ಸ್ವಾಮಿ, ಬೋಧನ್ನ ಜಯಕುಮಾರ ಪುರಾನೆ, ಮಹಾರಾಷ್ಟ್ರದ ಸೊಲ್ಲಾಪುರದ ರೇಣುಕ ಹಿರೇಮಠ ಮೊದಲಾದವರು ನಿಯೋಗದಲ್ಲಿ ಇದ್ದರು.