ಬೀದರ್: ನೆರೆಯ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕೆಲ ಕಿಡಿಗೇಡಿಗಳು ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿರುವುದನ್ನು ಜಿಲ್ಲೆಯವರೇ ಆದ ಚಿತ್ರನಟ ಹಣ್ಮುಪಾಜಿ ತೀವ್ರವಾಗಿ ಖಂಡಿಸಿದ್ದಾರೆ.
ಕಿಡಿಗೇಡಿಗಳು ಕನ್ನಡ ಧ್ವಜವನ್ನು ಸುಟ್ಟು ಹಾಕಿ ವಿಕೃತಿ ಮೆರೆದಿರುವುದು ಅತ್ಯಂತ ಹೀನ ಕೃತ್ಯ. ಬಾವುಟ ಕನ್ನಡಿಗರ ಅಸ್ಮಿತೆ. ಸ್ವಾಭಿಮಾನದ ಸಂಕೇತವೂ ಹೌದು. ಬಾವುಟಕ್ಕೆ ಅಪಮಾನ ಮಾಡುವುದನ್ನು ಸಹಿಸಲಾಗದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ನಾಡದ್ರೋಹಿಗಳನ್ನು ಕೂಡಲೇ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಕನ್ನಡ ವಿರೋಧಿ ಕೃತ್ಯ ಮುಂದುವರಿಸಿದರೆ ನಾಡಿನ ಕನ್ನಡಿಗರೇ ಬೆಳಗಾವಿಗೆ ತೆರಳಿ ಎಂ.ಇ.ಎಸ್. ಪುಂಡರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.