ಬಸವಕಲ್ಯಾಣ: ‘ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಎಲ್ಲರಲ್ಲೂ ರಾಷ್ಟ್ರಾಭಿಮಾನ ಉಕ್ಕಿ ಹರಿಯಬೇಕು. ಹರ್ ಘರ್ ತಿರಂಗಾ ಅಭಿಯಾನ ನಡೆಸಿ ಪ್ರತಿ ಮನ ಮತ್ತು ಮನೆಗಳಲ್ಲಿ ದೇಶದ ಕುರಿತು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಗೌರವ ಹೆಚ್ಚಿಸಲಾಗಿದೆ’ ಎಂದು ಶಾಸಕ ಶರಣು ಸಲಗರ ಹೇಳಿದರು.
ನಗರದ ತೇರು ಮೈದಾನದಲ್ಲಿನ ಸಭಾ ಭವನದಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ,‘ಜಗತ್ತಿನ ಮೊದಲ ಸಂಸತ್ತು ಎಂಬ ಹೆಗ್ಗಳಿಕೆಯ ಅನುಭವ ಮಂಟಪವಿದ್ದ ಈ ನೆಲದಲ್ಲಿ ನೂತನ ಮಂಟಪ ನಿರ್ಮಿಸುವ ಕಾರ್ಯ ಆರಂಭವಾಗಿದೆ’ ಎಂದರು.
ಉಪ ವಿಭಾಗಾಧಿಕಾರಿ ರಮೇಶ ಕೋಲಾರ ಮಾತನಾಡಿದರು. ನಿವೃತ್ತ ಸೈನಿಕರನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ತಹಶೀಲ್ದಾರ್ ಸಾವಿತ್ರಿ ಸಲಗರ, ಶಿವಕುಮಾರ ಜಡಗೆ ಹಾಗೂ ಮಹೇಶ ಮುಳೆ ಮಾತನಾಡಿದರು.
ನಗರಸಭೆ ಅಧ್ಯಕ್ಷೆ ಶಹಾಜಹಾನಾ ತನ್ವೀರ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಜಕುಮಾರ ಶಿರಗಾಪುರ, ಪೌರಾಯುಕ್ತ ಶಿವಕುಮಾರ, ತಾಲ್ಲೂಕು ಪಂಚಾಯಿತಿ ಇಒ ಕಿರಣ ಪಾಟೀಲ ಹಾಗೂ ಸಿಪಿಐ ರಘುವೀರಸಿಂಗ್ ಠಾಕೂರ ಇದ್ದರು.