ಔರಾದ್: ಇಲ್ಲಿಯ ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಗುರುನಾಥ ವಡ್ಡೆ ಬೆಂಗಳೂರಿನಲ್ಲಿ ಧರಣಿ ನಡೆಸಿದರು.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಇಡೀ ದಿನ ಧರಣಿಗೆ ಕುಳಿತರು. ಧಾರ್ಮಿಕ ಮತ್ತು ಐತಿಹಾಸಿಕ ಮಹತ್ವ ಪಡೆದಿರುವ ಔರಾದ್ನ ಅಮರೇಶ್ವರ ದೇವಸ್ಥಾನವು ಸರ್ಕಾರದ ಧಾರ್ಮಿಕ ಮತ್ತು ದತ್ತಿ ಇಲಾಖೆಯ ವ್ಯಾಪ್ತಿಗೆ ಬರುತ್ತದೆ. ಆದರೆ, ಅಭಿವೃದ್ಧಿಯಿಂದ ವಂಚಿತವಾಗಿದೆ ಎಂದು ಹೇಳಿದರು.
ಪ್ರಸ್ತುತ ದೇವಸ್ಥಾನದ ಮಹಾದ್ವಾರ ಬೀಳುವ ಸ್ಥಿತಿಯಲ್ಲಿದೆ. ಐದು ದಶಕದಿಂದ ನಡೆದುಕೊಂಡು ಬಂದ ದಾಸೋಹ ಸ್ಥಗಿತಗೊಂಡಿದೆ. ಕಲ್ಯಾಣ ಮಂಟಪ ಹಾಳಾಗಿದೆ. ಪೊಲೀಸ್ ಭದ್ರತೆ ಇಲ್ಲದೆ ದೇವಸ್ಥಾನದಲ್ಲಿ ಕುಡುಕರ ಮತ್ತು ಕಳ್ಳರ ಕಾಟ ಜಾಸ್ತಿಯಾಗಿದೆ ಎಂದು ತಿಳಿಸಿದರು.
ದೇವಸ್ಥಾನ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ದೇವಸ್ಥಾನದ ಆಡಳಿತಾಧಿಕಾರಿ ಸಹಾಯಕ ಆಯಕ್ತರು ಒಳಗೊಂಡಂತೆ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮುಜರಾಯಿ ಇಲಾಖೆ ಸಚಿವರ ಬಳಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಗಮನಕ್ಕೆ ತರುವ ಉದ್ದೇಶದಿಂದ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.