ಬೀದರ್: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾಗಿ ಮನ್ನಳ್ಳಿ ಕ್ಷೇತ್ರದ ಸದಸ್ಯ ಅನಿಲಕುಮಾರ ಪನ್ನಾಳೆ ಪುನರಾಯ್ಕೆಯಾದರೆ, ಚಿಲ್ಲರ್ಗಿ ಕ್ಷೇತ್ರದ ಸದಸ್ಯ ಬಸವರಾಜ ಶರ್ಮಾ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಸಮಿತಿಯ ಮೂರನೇ ಅವಧಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸದಸ್ಯ ಅನಿಲಕುಮಾರ ಪನ್ನಾಳೆ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯ ಶರಣಯ್ಯ ಸ್ವಾಮಿ ನಾಮಪತ್ರ ಸಲ್ಲಿಸಿದ್ದರು. ಶರಣಯ್ಯ ಸ್ವಾಮಿ ಅವರು ನಾಮಪತ್ರ ವಾಪಸ್ ಪಡೆದ ಕಾರಣ ಪನ್ನಾಳೆ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಬಸವರಾಜ ಶರ್ಮಾ ಮಾತ್ರ ನಾಮಪತ್ರ ಸಲ್ಲಿಸಿದ್ದರು.
ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯನ್ನು ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ್ ಕೀರ್ತಿ ಚಾಲಕ್ ಅಧಿಕೃತವಾಗಿ ಪ್ರಕಟಿಸಿದರು.
ಆಯ್ಕೆ ಪ್ರಕಟಿಸುತ್ತಿದ್ದಂತೆಯೇ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅವರ ಬೆಂಬಲಿಗರು ಹೂಮಾಲೆ ಹಾಕಿ ಅಭಿನಂದಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಈಶ್ವರಸಿಂಗ್ ಠಾಕೂರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ವಿಜಯಕುಮಾರ ಎಸ್. ಪಾಟೀಲ ಗಾದಗಿ, ಜಗನ್ನಾಥ ಪಾಟೀಲ ಇದ್ದರು.