ಬೀದರ್: ಹೆಲ್ಮೆಟ್ ಜೀವ ಉಳಿಸುವ ಸಾಧನವಾಗಿದೆ. ಹೀಗಾಗಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಸಂಸದ ಭಗವಂತ ಖೂಬಾ ಸಲಹೆ ಮಾಡಿದರು.
32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಪ್ರಯುಕ್ತ ಪ್ರಾದೇಶಿಕ ಸಾರಿಗೆ ಇಲಾಖೆ, ಭಾಗ್ಯವಂತಿ ಮೋಟಾರ್ ಡ್ರೈವಿಂಗ್ ಸ್ಕೂಲ್ ಹಾಗೂ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು ವತಿಯಿಂದ ಇಲ್ಲಿಯ ಶಹಾಪುರ ಗೇಟ್ ಸಮೀಪದ ಶಾಹೀನ್ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯುವಕರು ರಸ್ತೆ ಸುರಕ್ಷತಾ ನಿಯಮ ಪಾಲಿಸದ ಕಾರಣ ರಸ್ತೆ ಅಪಘಾತಗಳು ಹೆಚ್ಚುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಪ್ರತಿ ವ್ಯಕ್ತಿಗೂ ಅವಲಂಬಿತರು ಇರುತ್ತಾರೆ. ವಾಹನ ಚಾಲಕರು ಜಾಗೃತಿಯಿಂದ ವಾಹನ ಚಲಾಯಿಸ ಬೇಕು ಎಂದು ಕಿವಿಮಾತು ಹೇಳಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಶಂಕರ ಮಾತನಾಡಿ, ಸಂಚಾರ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸುವುದರಿಂದ ರಸ್ತೆ ಅಪಘಾತಗಳನ್ನು ನಿಯಂತ್ರಿಸಬಹುದು ಎಂದು ತಿಳಿಸಿದರು.
ಭಾಗ್ಯವಂತಿ ಮೋಟರ್ ಡ್ರೈವಿಂಗ್ ಸ್ಕೂಲ್ ಪ್ರಾಚಾರ್ಯ ಶಿವರಾಜ ಜಮಾದಾರ್ ಅವರು ಬೈಕ್ ಸವಾರರಿಗೆ ಹೆಲ್ಮೆಟ್ ಉಚಿತವಾಗಿ ವಿತರಿಸಿದರು.