ಬೆಳಗಾವಿ: ಇಲ್ಲಿನ ಕಿತ್ತೂರು ಕ್ಷೇತ್ರದಿಂದ ತಮಗೆ ಟಿಕೆಟ್ ತಡೆಹಿಡಿದಿರುವುದರಿಂದ ತೀವ್ರ ಅಸಮಾಧಾನಗೊಂಡಿರುವ ಶಾಸಕ ಡಿ.ಬಿ.ಇನಾಮದಾರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ಸಲ್ಲಿಸುವ ಮೂಲಕ ಭಿನ್ನಮತ ಹೊರಹಾಕಿದ್ದಾರೆ. ಅವರು ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.
ಈ ಚುನಾವಣೆಯಲ್ಲೂ ಅವರು ಕಾಂಗ್ರೆಸ್ ಟಿಕೆಟ್ ಬಯಸಿದ್ದರು. ಆದರೆ, ಅನಾರೋಗ್ಯದ ಕಾರಣದಿಂದಾಗಿ ಅವರಿಗೆ ಅವಕಾಶ ನಿರಾಕರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಅವರ ಸಂಬಂಧಿ ಬಾಬಾಸಾಹೇಬ ಪಾಟೀಲಗೆ ಟಿಕೆಟ್ ಕೊಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಬೇಸರಗೊಂಡ ಇನಾಮದಾರ್ ಪಕ್ಷದಿಂದ ಹೊರಬಂದಿದ್ದಾರೆ.
‘ಪಕ್ಷದಲ್ಲಿ ನನ್ನ ಹಿರಿತನ, ಅನುಭವಕ್ಕೆ ಬೆಲೆ ನೀಡಿಲ್ಲ. ಸರಿಯಾಗಿ ನಡೆಸಿಕೊಂಡಿಲ್ಲ. ಟಿಕೆಟ್ ಯಾರಿಗೆ ಕೊಡುತ್ತಾರೆ ಎನ್ನುವ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಪಕ್ಷ ತ್ಯಜಿಸಿರುವುದಂತೂ ನಿಜ. ರಾಜೀನಾಮೆ ಸಲ್ಲಿಸುವುದಕ್ಕೆ ಯಾವುದೇ ಕಾರಣವನ್ನೂ ನೀಡಿಲ್ಲ. ಇದೇ 20ರಂದು ಕಿತ್ತೂರಿನಲ್ಲಿ ಬೆಂಬಲಿಗರ ಸಭೆ ನಡೆಸಿ, ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.
ಜನತಾ ಪಕ್ಷದಿಂದ ಎರಡು ಹಾಗೂ ಕಾಂಗ್ರೆಸ್ನಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು, ಎಸ್.ಎಂ.ಕೃಷ್ಣ ನೇತೃತ್ವದ ಸರ್ಕಾರದಲ್ಲಿ ಸಚಿವರೂ ಆಗಿ ಕಾರ್ಯನಿರ್ವಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.