ಹುಮನಾಬಾದ್: ತಾಲ್ಲೂಕಿನ ಹುಡಗಿ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿಯುವ ಕೊಳಚೆ ನೀರು, ಸಿಸಿ ರಸ್ತೆಗಳು, ನಿಯಂತ್ರಣಕ್ಕೆ ಬಾರದ ಬಹಿರ್ದೆಸೆ ಹಾಗೂ ಸ್ವಚ್ಛತೆಯ ಸಮಸ್ಯೆಯಿಂದ ಗ್ರಾಮಸ್ಥರು ಪರದಾಡುವಂತಾಗಿದೆ.
‘ಗ್ರಾಮದಲ್ಲಿ ಈವರೆಗೂ ಸೂಕ್ತ ಚರಂಡಿ ವ್ಯವಸ್ಥೆಯಾಗಿಲ್ಲ. ಅಲ್ಲದೇ ಗ್ರಾ.ಪಂ.ಸಿಬ್ಬಂದಿ, ಅಧಿಕಾರಿಗಳು ಚರಂಡಿಯಲ್ಲಿನ ತ್ಯಾಜ್ಯ ವಿಲೇವಾರಿಗೆ ಕ್ರಮಕೈಗೊಂಡಿಲ್ಲ. ಹೀಗಾಗಿ ಕೊಳಚೆ ನೀರು ಹರಿಯಲು ಸೂಕ್ತ ವ್ಯವಸ್ಥೆಯಿಲ್ಲದೇ ರಸ್ತೆ ಮೇಲೆಯೇ ಹರಿಯುತ್ತಿದೆ. ಕೊಳಚೆ ನೀರು ಖಾಲಿ ನಿವೇಶನಗಳಲ್ಲಿ ಸಂಗ್ರಹಗೊಂಡು ಸೊಳ್ಳೆಗಳ ಉತ್ಪತ್ತಿ ತಾಣವಾಗುತ್ತಿವೆ. ಸೊಳ್ಳೆಗಳಿಂದಾಗಿ ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಶೀಘ್ರದಲ್ಲೇ ಚರಂಡಿಗಳಲ್ಲಿ ನೀರು ಹರಿಯುವಂತೆ ಕ್ರಮಕೈಗೊಳ್ಳಬೇಕು’ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗ್ರಾಮದಲ್ಲಿ ಬಹುತೇಕರು ಸ್ವಚ್ಛಗ್ರಾಮ ಯೋಜನೆ ಅಡಿಯಲ್ಲಿ ತಮ್ಮ ಮನೆಗಳಲ್ಲೇ ಶೌಚಾಲಯಗಳನ್ನು ನಿರ್ಮಿಸಿಕೊಂಡಿದ್ದಾರೆ. ಜತೆಗೆ ಗ್ರಾಮದಲ್ಲಿ ಸಾರ್ವಜನಿಕ ಶೌಚಾಲಯಗಳನ್ನೂ ನಿರ್ಮಿಸಲಾಗಿದೆ. ಆದರೂ ಗ್ರಾಮಸ್ಥರು ಮಾತ್ರ ಅವುಗಳನ್ನು ಬಳಸದೇ ಬಹಿರ್ದಸೆಗೆಂದು ತೆರಳುತ್ತಾರೆ. ಹೀಗಾಗಿ ಗ್ರಾ.ಪಂ. ಸಿಬ್ಬಂದಿ ಹಾಗೂ ಅಧಿಕಾರಿಗಳು, ಗ್ರಾಮಸ್ಥರಲ್ಲಿ ಶೌಚಾಲಯ ಬಳಕೆ ಕುರಿತು ಜಾಗೃತಿ ಹಾಗೂ ಅರಿವು ಮೂಡಿಸಬೇಕು ಎಂದು ಶಶಿಕುಮಾರ್ ಒತ್ತಾಯಿಸಿದ್ದಾರೆ.
ಗ್ರಾಮದಲ್ಲಿ ಎಲ್ಲೆಂದರಲ್ಲಿ ಕಸ ಸಂಗ್ರಹಗೊಂಡ ಗಬ್ಬು ನಾರುತ್ತಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಮೋಹನ್ ಆಗ್ರಹಿಸಿದ್ದಾರೆ.
ಈಗಾಗಲೇ ಗ್ರಾಮದ ಬೇರೆ ಬಡಾವಣೆಗಳಲ್ಲಿ ಚರಂಡಿ ಸ್ವಚ್ಛತೆ ಕೆಲಸ ನಡೆಯುತ್ತಿದೆ. ಹೊಲಗಳ ದಾರಿ ಸಮಸ್ಯೆ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು
-ಶಿವರಾಜ ಪಿಡಿಒ
‘ದೇವಸ್ಥಾನ ಅಭಿವೃದ್ಧಿ ಪಡಿಸಿ’
ಹುಡಗಿ ಗ್ರಾಮದಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಐತಿಹಾಸಿಕ ಕರಿಬಸವೇಶ್ವರ ಹಾಗೂ ಎಂಕಮ್ಮಾ ದೇವಸ್ಥಾನಗಳಿವೆ. ಈ ದೇವಸ್ಥಾನಗಳಿಗೆ ನಿತ್ಯವೂ ಭಕ್ತರು ಭೇಟಿ ನೀಡುತ್ತಾರೆ. ಹೀಗಾಗಿ ಈ ಐತಿಹಾಸಿಕ ಸ್ಥಳಗಳು ಇನ್ನಷ್ಟು ಅಭಿವೃದ್ಧಿ ಪಡಿಸಬೇಕು ಎಂದು ಗ್ರಾಮಸ್ಥ ಶಶಿಕುಮಾರ್ ಮಾಶೆಟ್ಟಿ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.