ಬೀದರ್: ‘ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ದರೆ ಬೀದರ್ ಜಿಲ್ಲೆಯನ್ನು ಗುಡಿಸಲು ಮುಕ್ತ ಮಾಡುವೆ’ ಎಂದು ಪಕ್ಷೇತರ ಅಭ್ಯರ್ಥಿ ಗೋಪಾಲ ಎಂ.ಪಿ. ಗಾರಂಪಳ್ಳಿ ಭರವಸೆ ನೀಡಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವೆ. ನಿರುದ್ಯೋಗಿಗಳಿಗೆ ಉದ್ಯೋಗ ಕೊಡಿಸುವೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನೆ ಹಾಕಿಕೊಂಡಿರುವೆ. ಒಂದು ಬಾರಿ ಅವಕಾಶ ನೀಡಬೇಕು’ ಎಂದು ಮನವಿ ಮಾಡಿದರು.
‘ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮಗನಿಗೆ ಟಿಕೆಟ್ ಕೊಡಿಸಿ ಕುಟುಂಬ ರಾಜಕಾರಣ ಅಭಿವೃದ್ಧಿ ಮಾಡುತ್ತಿದ್ದಾರೆ. ಸಂಸದ, ಕೇಂದ್ರ ಸಚಿವ ಭಗವಂತ ಖೂಬಾ ಸಾಧನೆ ಶೂನ್ಯ. ಕೇವಲ ಕುರ್ಚಿಗಳನ್ನು ಹಾಕಿದ್ದೆ ಇವರ ಸಾಧನೆಯಾಗಿದೆ’ ಎಂದು ಟೀಕಿಸಿದರು.
‘ಜಗತ್ತಿಗೆ ಪ್ರಥಮ ಸಂಸತ್ ನೀಡಿದ ನಾಡು ಇದು. 12ನೇ ಶತಮಾನದಲ್ಲಿ ಬಸವಾದಿ ಶರಣರು ಸಮಸಮಾಜ ನಿರ್ಮಿಸಿ ಮಾದರಿಯಾಗಿದ್ದರು. ಆದರೆ, ಪ್ರಸ್ತುತ ಈ ನಾಡಿನಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಹೇಳಿದರು.