ಬೀದರ್: ‘ನಗರದ ಸುತ್ತಮುತ್ತಲಿನ ಡಾಬಾಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಸಂಬಂಧಿಸಿದವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಕರ್ನಾಟಕ ಮಾದಾರ ಚನ್ನಯ್ಯಾ ಹೋರಾಟ ಸಮಿತಿ ಅಧ್ಯಕ್ಷ ರಮೇಶ ಕಟ್ಟಿತೂಗಾಂವ ಆರೋಪಿಸಿದ್ದಾರೆ.
ಈ ಸಂಬಂಧ ಅಬಕಾರಿ ಇಲಾಖೆಯ ಉಪ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಮದ್ಯ ಮಾರಾಟ ಮಳಿಗೆಯವರಿಗೆ ಮದ್ಯ ಮಾರಾಟಕ್ಕಷ್ಟೇ ಅನುಮತಿ ಇದೆ. ಆದರೆ, ಜನರಿಗೆ ಆಸನಗಳ ವ್ಯವಸ್ಥೆ ಮಾಡಿ ಮದ್ಯ ಸೇವನೆಗೆ ಅವಕಾಶ ಕಲ್ಪಿಸುತ್ತಿದ್ದಾರೆ. ಇದು ಕಾನೂನುಬಾಹಿರ ಕೃತ್ಯ. ಅವರ ವಿರುದ್ಧವೂ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.