ಬೀದರ್: ಜಿಲ್ಲೆಯಲ್ಲಿ ಇರುವ ಅನಧಿಕೃತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.
ಸಮಿತಿಯ ಪದಾಧಿಕಾರಿಗಳು ನಗರದಲ್ಲಿ ಮಂಗಳವಾರ ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಜಿಲ್ಲೆಯಲ್ಲಿ 2013-14ನೇ ಸಾಲಿನಿಂದ ಅನಧಿಕೃತ ಶಾಲೆಗಳ ಹಾವಳಿ ಹೆಚ್ಚಾಗಿದೆ. ಅನಧಿಕೃತ ಶಾಲೆಗಳ ಆಡಳಿತ ಮಂಡಳಿ ವಿರುದ್ಧ ಶಿಕ್ಷಣ ಕಾಯ್ದೆ 1983 ರ ನಿಯಮ 123 ರ ಅಡಿ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಆದೇಶ ನೀಡಿದ್ದಾರೆ. ಆದರೆ, 2013-14 ರಿಂದ 2017-18ನೇ ಸಾಲಿನವರೆಗೆ ಹಾಗೂ 2019-20 ರಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭಾರ ವಹಿಸಿಕೊಂಡಿದ್ದ ಮಹಮ್ಮದ್ ಗುಲ್ಶನ್ ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಸದ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಶಿಕ್ಷಣ ಅಧಿಕಾರಿಯಾಗಿರುವ ಮಹಮ್ಮದ್ ಗುಲ್ಶನ್ ಅವ್ಯವಹಾರದಲ್ಲಿ ಭಾಗಿಯಾಗಿ, ಅನಧಿಕೃತ ಶಾಲೆಗಳಿಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಕೂಡಲೇ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಸಮಿತಿಯ ಜಿಲ್ಲಾ ಸಂಚಾಲಕ ಉಮೇಶಕುಮಾರ ಸ್ವಾರಳ್ಳಿಕರ್, ಸಂಘಟನಾ ಸಂಚಾಲಕ ನರಸಿಂಗ್ ಸಾಮ್ರಾಟ್, ಪ್ರಮುಖರಾದ ರವಿಕುಮಾರ ವಾಘಮಾರೆ, ದಿಲೀಪ್ ದೊಡ್ಡಮನಿ, ಸುನೀಲ ಪವಾರ್, ಲೋಕೇಶ ಮೇತ್ರೆ ಮೊದಲಾದವರು ಇದ್ದರು.