ಬೀದರ್: ಹಿರಿಯ ಕನ್ನಡ ಪರ ಹೋರಾಟಗಾರರಾಗಿದ್ದ ಹಣಮಂತಪ್ಪ ಪಾಟೀಲ (80) ಬುಧವಾರ ಇಲ್ಲಿ ನಿಧನರಾದರು.
ಅವರಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ. ಪಾಟೀಲ ಅವರು 1970 ರಿಂದಲೂ ಕನ್ನಡ ಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಸರಳ, ಸಜ್ಜನಿಕೆಗೆ ಹೆಸರಾಗಿದ್ದ ಅವರು ತಮ್ಮದೇ ಆದ ಘನತೆ ಕಾಪಾಡಿಕೊಂಡು ಬಂದಿದ್ದರು.
ಶಿಕ್ಷಕ, ಸಮಾಜ ಸೇವಕ, ಪತ್ರಕರ್ತರಾಗಿಯೂ ಕಾರ್ಯ ನಿರ್ವಹಿಸಿದ್ದರು. ಜಿಲ್ಲೆಯ ಹಿರಿಯ-ಕಿರಿಯ ಕನ್ನಡ ಹೋರಾಟಗಾರರು ಮತ್ತು ಸಾಹಿತಿಗಳ ನಡುವೆ ಸಂಪರ್ಕ ಕೊಂಡಿಯಾಗಿದ್ದರು.
1970 ರಲ್ಲಿ ಡಿ.ಎಲ್. ನರಸಿಂಹಾಚಾರ್ಯ ಅವರು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದಾಗ ಪಾಟೀಲ ಅವರನ್ನು ಬೀದರ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿದ್ದರು.
ಕನ್ನಡಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ ಬೀದರ್ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಗೌರವಕ್ಕೆ ಪಾತ್ರರಾಗಿದ್ದರು.
ಗುರುವಾರ ಸಿದ್ಧಾರೂಢ ಮಠದ ಹಿಂದುಗಡೆ ಇರುವ ಅವರ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಿತು.