ಹುಮನಾಬಾದ್: ‘ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಕಳಪೆ ಎಂದು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು’ ಎಂದು ಶಾಸಕ ರಾಜಶೇಖರ ಪಾಟೀಲ ಎಚ್ಚರಿಕೆ ನೀಡಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದ ಅಡಿ ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ಚರ್ಚಿಸಲು ಮಂಗಳವಾರ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ₹43 ಕೋಟಿ ಬಿಡುಗಡೆಯಾಗಿದೆ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.
ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸಲು ₹10 ಲಕ್ಷ ಅನುದಾನ ಬಿಡುಗಡೆ ಮಾಡಲಾಗುವುದು. ವಿಡಿಯೊ ಸಂವಾದ ಭವನ ನಿರ್ಮಾಣದ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಬಿಡುಗಡೆಯಾದ 43 ಕೋಟಿ ಅನುದಾದಲ್ಲಿ ಪಿಎಂಜಿಎಸ್ವೈ, ಲೋಕೋಪಯೋಗಿ, ಅರಣ್ಯ, ಬಿಸಿಎಂ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿ ವಿವಿಧ ಇಲಾಖೆಗಳಿಗೆ ಮೂಲ ಸೌಲಭ್ಯ ಒದಗಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗುವುದು ಎಂದರು.
ತಾಲ್ಲೂಕಿನ ಹಳ್ಳಿಖೇಡ(ಬಿ) ಮತ್ತು ದುಬಲಗುಂಡಿಯಲ್ಲಿ ಬಿಸಿಎಂ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ₹4 ಕೋಟಿ ಅನುದಾನ ನೀಡಲಾಗಿದೆ. ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ. ಮುಂಬರುವ ದಿನಗಳಲ್ಲಿ ಉದ್ಘಾಟಿಸಲಾಗುವುದು ಎಂದರು.
ಕ್ಷೇತ್ರದ ಜನರ ಸಮಸ್ಯೆ ಆಲಿಸುವುದು ಮತ್ತು ಮೂಲ ಸೌಕರ್ಯ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ತಹಶೀಲ್ದಾರ್ ನಾಗಯ್ಯ ಹಿರೇಮಠ, ಚಿಟಗುಪ್ಪ ತಹಶೀಲ್ದಾರ್ ಜಿಯಾವುಲ್ಲ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬೀರೇಂದ್ರ ಸಿಂಗ್, ಮಡೋಳಪ್ಪ, ಪಶುಸಂಗೋಪಾ ಇಲಾಖೆ ಉಪನಿರ್ದೇಶಕ ಡಾ.ಗೋವಿಂದ, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ, ಎಂ.ಡಿ.ಯುಸೂಫ್, ಎಇಇ ವಾಮನರಾವ ಜಾಧವ, ಸಿಡಿಪಿಒ ಶೋಭಾ ಕಟ್ಟಿ , ಲಿಂಗರಾಜ ಅರಸ್ ಹಾಗೂ ವಿಠಲ್ ಸೇಡಂ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.