ಬೀದರ್: ‘ಜಿಲ್ಲೆಯಲ್ಲಿ ನಿತ್ಯ 25 ಸಾವಿರ ಜನರಿಗೆ ಕೋವಿಡ್ ಲಸಿಕೆ ಕೊಡಲು ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ತಹಶೀಲ್ದಾರೊಂದಿಗೆ ವಿಡಿಯೊ ಸಂವಾದ ನಡೆಸಿ ಅವರು ಮಾತನಾಡಿದರು.
‘ಆರೋಗ್ಯ ಇಲಾಖೆಯ ಸಚಿವ ಡಾ.ಕೆ.ಸುಧಾಕರ್ ಅವರು ರಾಜ್ಯದ ವಿವಿಧ ಜಿಲ್ಲೆಗಳಿಗೆ ಜಿಲ್ಲಾವಾರು ಕೋವಿಡ್ ಲಸಿಕೆ ನೀಡಿಕೆಯ ಗುರಿಯನ್ನು ನಿಗದಿಪಡಿಸಿದ್ದಾರೆ. ಆದ್ದರಿಂದ ಕಾಲಮಿತಿಯೊಳಗೆ ಗುರಿ ಸಾಧನೆಗೆ ಕ್ರಮ ವಹಿಸಬೇಕಿದೆ. ಎಲ್ಲ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು.
‘ಕೋವಿಡ್ ಮೊದಲ ಡೋಸ್ ನೀಡಿಕೆಯ ಗುರಿ ಸೆಪ್ಟೆಂಬರ್ 30ರೊಳಗೆ ಪೂರ್ಣಗೊಳ್ಳಬೇಕು. ಕೋವಿಡ್-19 ಲಸಿಕಾ ಅಭಿಯಾನವು ಸದ್ಯದಲ್ಲೇ ಅಂತ್ಯವಾಗಲಿದೆ. ಜಿಲ್ಲೆಯ ಜನ ಸೆಪ್ಟೆಂಬರ್ 30ರೊಳಗೆ ತಪ್ಪದೆ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರಬೇಕು’ ಎಂದು ಮನವಿ ಮಾಡಿದರು.
‘ಈವರೆಗೂ ಕೋವಿಡ್ ಲಸಿಕೆ ಪಡೆಯದವರು ಸಮೀಪದ ಆರೋಗ್ಯ ಕೇಂದ್ರಕ್ಕೆ ಇಲ್ಲವೇ ವಿವಿಧಡೆ ನಡೆಯುವ ಲಸಿಕಾಕರಣದ ಕೇಂದ್ರಗಳಿಗೆ ತೆರಳಿ ಲಸಿಕೆ ಹಾಕಿಕೊಳ್ಳಬೇಕು’ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ.ರೆಡ್ಡಿ ಮಾತನಾಡಿ, ‘ಬೀದರ್ ಜಿಲ್ಲೆಯಲ್ಲಿ ಈವರೆಗೆ 10.11 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಶೇಕಡ 63ರಷ್ಟು ಜನರಿಗೆ ಮೊದಲನೇ ಡೋಸ್ ಹಾಗೂ ಶೇಕಡ 32ರಷ್ಟು ಮಂದಿಗೆ ಎರಡನೇ ಡೋಸ್ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಆಮ್ಲಜನಕ ಉತ್ಪಾದನೆ ಘಟಕಗಳ ಸ್ಥಾಪನೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ‘ಎಲ್ಲ ತಾಲ್ಲೂಕುಗಳಲ್ಲಿ ಆಮ್ಲಜನಕ ಘಟಕಗಳ ಸ್ಥಾಪನೆ ಕಾಮಗಾರಿ ಮುಕ್ತಾಯದ ಹಂತಕ್ಕೆ ತಲುಪಿದೆ’ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್, ಐಎಎಸ್ ಪ್ರೊಬೆಷನರಿ ಅಧಿಕಾರಿ ಕೀರ್ತನಾ, ಬ್ರಿಮ್ಸ್ ನಿರ್ದೇಶಕ ಡಾ.ಚಂದ್ರಕಾಂತ ಚಿಲ್ಲರಗಿ, ಆರ್ಸಿಎಚ್ ಅಧಿಕಾರಿ ಡಾ.ರಾಜಶೇಖರ ಪಾಟೀಲ, ಡಿಎಸ್ಓ ಡಾ.ಕೃಷ್ಣಾ ರೆಡ್ಡಿ ಇದ್ದರು.