ಜನವಾಡ: ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪ ಇರುವ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೋವಿಡ್ ಲಸಿಕಾಕರಣ ಕಾರ್ಯಕ್ರಮ ನಡೆಯಿತು.
59 ವಿದ್ಯಾರ್ಥಿಗಳು, 47 ಬೋಧಕ, ಬೋಧಕೇತರ ಸಿಬ್ಬಂದಿ ಸೇರಿ 106 ಜನರಿಗೆ ಲಸಿಕೆ ಕೊಡಲಾಯಿತು.
ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಲಸಿಕೆ ಪಡೆದುಕೊಂಡಿದ್ದಾರೆ. ಜುಲೈ 26 ಮತ್ತು 30 ರಂದು ನಡೆದಿದ್ದ ಲಸಿಕಾಕರಣದಲ್ಲೂ 64 ವಿದ್ಯಾರ್ಥಿಗಳು, 54 ಬೋಧಕ, ಬೋಧಕೇತರ ಸಿಬ್ಬಂದಿ ಸೇರಿ 118 ಜನ ಲಸಿಕೆ ತೆಗೆದುಕೊಂಡಿದ್ದರು ಎಂದು ಹೇಳಿದರು.
ಕೋವಿಡ್ನಿಂದ ರಕ್ಷಣೆಗೆ ಅರ್ಹರೆಲ್ಲರೂ ಲಸಿಕೆ ಪಡೆಯಬೇಕು. ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ. ಸಂಪೂರ್ಣ ಸುರಕ್ಷಿತವಾಗಿದೆ. ಲಸಿಕೆ ಕುರಿತ ಗಾಳಿ ಸುದ್ದಿಗಳಿಗೆ ಕಿವಿಗೊಡಬಾರದು ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಲಸಿಕಾಕರಣ ನಡೆಸಿಕೊಟ್ಟರು. ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಇದ್ದರು