ಬೀದರ್: ದೈನಂದಿನ ಕಚೇರಿ ಕೆಲಸ, ಲೋಕಸಭಾ ಚುನಾವಣೆ, ಎಸ್ಸೆಸ್ಸೆಲ್ಸಿ ಪರೀಕ್ಷೆ, ಬರ ನಿರ್ವಹಣೆ, ಹಬ್ಬ ಹರಿದಿನಗಳು... ಹೀಗೆ ಒಂದಾದ ನಂತರ ಒಂದು ಬರುತ್ತಿರುವುದರಿಂದ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಈಗ ಬಿಡುವಿಲ್ಲದ ಕೆಲಸ. ಹೆಚ್ಚುವರಿ ಕಾರ್ಯ ‘ಭಾರ’.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಬೇಕಾದ ಹೊಣೆಗಾರಿಕೆ ಸರ್ಕಾರಿ ನೌಕರರು, ಸಿಬ್ಬಂದಿ ಮೇಲಿದೆ. ಬಹುತೇಕ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಹೀಗಿದ್ದರೂ ಅವುಗಳ ಅನುಷ್ಠಾನಕ್ಕೆ ಪ್ರಯತ್ನಿಸುತ್ತಿದ್ದಾರೆ.
ಕಳೆದ ಆರು ತಿಂಗಳಿಂದ ಲೋಕಸಭಾ ಚುನಾವಣೆಯ ತಯಾರಿಯಲ್ಲಿ ನೌಕರರು ತೊಡಗಿಸಿಕೊಂಡಿದ್ದಾರೆ. ಈಗ ಚುನಾವಣೆ ಘೋಷಣೆಯಾಗಿದ್ದು, ಈಗ ಅವರಿಗೆ ಬಿಡುವಿಲ್ಲದ ಕೆಲಸ. ಪಿಯುಸಿ ಪರೀಕ್ಷೆ ಮುಗಿಯುತ್ತಿದ್ದಂತೆ ಈಗ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರದಿಂದ (ಮಾ.245) ಆರಂಭವಾಗುತ್ತಿದ್ದು, ಏಪ್ರಿಲ್ 6ರ ವರೆಗೆ ನಡೆಯಲಿವೆ. ಇದಾದ ಬಳಿಕ ಪಿಯು, ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಬೇಕಿದೆ.
ಇನ್ನು, ಸಮರ್ಪಕವಾಗಿ ಮಳೆಯಾಗದ ಕಾರಣಕ್ಕೆ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಕುಡಿಯುವ ನೀರು, ಮೇವಿಗೆ ಕೊರತೆ ಆಗದಂತೆ ನೋಡಿಕೊಳ್ಳಬೇಕಾದ ಹೊಣೆಗಾರಿಕೆಯೂ ಇದೆ. ಇದಕ್ಕಾಗಿ ಎಲ್ಲಾ ತಾಲ್ಲೂಕುಗಳಲ್ಲಿ ಸಹಾಯವಾಣಿ ತೆರೆಯಲಾಗಿದೆ. ಇದರೊಟ್ಟಿಗೆ ಚುನಾವಣೆಯ ಕೆಲಸವನ್ನು ಚಾಚೂತಪ್ಪದೇ ಮಾಡಲೇಬೇಕಿದೆ. ಹೀಗೆ ಒಂದಾದ ನಂತರ ಒಂದು ಹೆಚ್ಚುವರಿ ಕೆಲಸ ಅವರ ಹೆಗಲ ಮೇಲೆ ಬೀಳುತ್ತಿರುವುದರಿಂದ ಅವರು ತೀವ್ರ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಇದು ಅವರ ಆರೋಗ್ಯದ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಆದರೆ, ಸರ್ಕಾರಿ ಆದೇಶ ಪಾಲಿಸಲೇಬೇಕಾದ ಅನಿವಾರ್ಯತೆ ಅವರಿಗಿದೆ.
ಅದರಲ್ಲೂ ಪೊಲೀಸರ ಮೇಲೆ ಹೆಚ್ಚಿನ ಒತ್ತಡ ಇದೆ. ಪ್ರತಿಯೊಂದಕ್ಕೂ ಪೊಲೀಸರು ಇರಲೇಬೇಕು. ಚುನಾವಣೆ, ಪರೀಕ್ಷೆ, ಹಬ್ಬ ಹರಿದಿನಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಹೊಣೆ ಪೊಲೀಸ್ ಇಲಾಖೆಯ ಮೇಲಿದೆ.
ಈಗ ಚುನಾವಣೆ ಘೋಷಣೆ ಆಗಿರುವುದರಿಂದ ಪೊಲೀಸರ ಮೇಲೆ ಹೆಚ್ಚಿನ ಜವಾಬ್ದಾರಿ ಇರುತ್ತದೆ. ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ವಹಿಸಿ ಅವುಗಳನ್ನು ತಡೆಯಬೇಕಿದೆ. ಇನ್ನೊಂದೆಡೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಲ್ಲಿ ಅಕ್ರಮಗಳು ತಡೆಯದಂತೆ ನೋಡಿಕೊಳ್ಳಬೇಕು. ಹೋಳಿ ಹಬ್ಬ, ರಂಜಾನ್ ಮಾಸ ಇರುವುದರಿಂದ ಶಾಂತಿ, ಸೌಹಾರ್ದತೆಗೆ ಧಕ್ಕೆ ಬರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
‘ದಿನೇ ದಿನೇ ಪೊಲೀಸರಿಗೆ ಕೆಲಸದ ಒತ್ತಡ ಹೆಚ್ಚಾಗುತ್ತಿದೆ. ಟಿಎ, ಡಿಎ ಕೊಡುತ್ತಾರೆ. ಆದರೆ, ಅವಧಿ ಮೀರಿ ಕೆಲಸ ಮಾಡಿದರೆ ಆರೋಗ್ಯ ಏನಾಗಬಾರದು. ಕಾಲಕಾಲಕ್ಕೆ ಅಗತ್ಯ ಸಿಬ್ಬಂದಿ ನೇಮಕ ಮಾಡಿಕೊಂಡರೆ ಈ ಪರಿಸ್ಥಿತಿ ಉಂಟಾಗುವುದಿಲ್ಲ. ಆದರೆ, ಆ ಕೆಲಸ ಆಗುತ್ತಿಲ್ಲ. ಹೀಗಾಗಿ ಇರುವ ಸಿಬ್ಬಂದಿ ಎಲ್ಲವೂ ಮಾಡಬೇಕಾದ ಪರಿಸ್ಥಿತಿ ಇದೆ. ಬೀದರ್ ಜಿಲ್ಲೆಯಲ್ಲಿ 20 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇದೆ. ಆದರೆ, 1200ರಿಂದ 1500 ಪೊಲೀಸ್ ಸಿಬ್ಬಂದಿ ಇದ್ದೇವೆ. ವೈಜ್ಞಾನಿಕವಾಗಿ ಜನಸಂಖ್ಯೆಗೆ ತಕ್ಕಂತೆ ಇದು ಸರಿಯಲ್ಲ’ ಎಂದು ಹೆಸರು ಹೇಳಲಿಚ್ಛಿಸದ ಹಿರಿಯ ಪೊಲೀಸ್ ಅಧಿಕಾರಿ ‘ಪ್ರಜಾವಾಣಿ’ಗೆ ತಿಳಿಸಿದರು.
‘ಪ್ರತಿ ಸಲ ಚುನಾವಣೆ ಬಂದಾಗ ಯಾಕಪ್ಪ ಇದು ಬಂತು ಅನಿಸುತ್ತದೆ. ನಿತ್ಯದ ಕಚೇರಿ ಕೆಲಸ ಮಾಡಲೇಬೇಕು. ಜೊತೆಗೆ ಚುನಾವಣೆಯ ಹೆಚ್ಚುವರಿ ಕೆಲಸ ಮಾಡಬೇಕು. ಚುನಾವಣೆ ಕೆಲಸದಲ್ಲಿ ಸ್ವಲ್ಪ ಹೆಚ್ಚು ಕಮ್ಮಿಯಾದರೂ ಸಮಸ್ಯೆ ಎದುರಿಸಬೇಕಾಗುತ್ತದೆ’ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಗೋಳು ತೋಡಿಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.