ಬೀದರ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಮರಾಠ ಪಾರ್ಟಿಯಿಂದ ಬೀದರ್ ಕ್ಷೇತ್ರದಿಂದ ವಿಜಯಕುಮಾರ ಪಾಟೀಲ ಕಣಜಿಕರ್ ಅಧಿಕೃತ ಅಭ್ಯರ್ಥಿಯಾಗಿದ್ದಾರೆ ' ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮನೋಹರರಾವ್ ಜಾಧವ್ ತಿಳಿಸಿದರು.
ಮರಾಠ ಸಮುದಾಯದವರಿಗೆ ಯಾವ ಪಕ್ಷವೂ ಟಿಕೆಟ್ ನೀಡಿಲ್ಲ. ಅನ್ಯಾಯವೆಸಗಿವೆ. ರಾಜ್ಯದ ಎಂಟು ಜಿಲ್ಲೆಗಳಲ್ಲಿ ನಮ್ಮ ಪಕ್ಷದಿಂದ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತಿದೆ ಎಂದು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬಿಜೆಪಿಯ ಹಾಲಿ ಸಂಸದ ಭಗವಂತ ಖೂಬಾ, ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಸೇರಿದಂತೆ ಇನ್ನಿತರ ನಾಯಕರು ಮರಾಠ ಸಮಾಜವನ್ನು 2ಎ ಸೇರಿಸುವ ಭರವಸೆ ನೀಡಿದ್ದರು. ಆದರೆ ಅವರು ಅದರ ಬಗ್ಗೆ ಮಾತೇ ಆಡುತ್ತಿಲ್ಲ. ಹೀಗಾಗಿ ನಮ್ಮ ಸಮಾಜದವರಿಗೆ ಕಡೆಗಣನೆ ಮಾಡಲಾಗುತ್ತಿದೆ. ಅವರಿಗೆ ತಕ್ಕ ಪಾಠ ಕಲಿಸಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇವೆ. ನಮಗೆ ಎಲ್ಲ ಸಮುದಾಯದವರ ಬೆಂಬಲವಿದೆ ಎಂದು ಹೇಳಿದರು.
ರಾಷ್ಟ್ರೀಯ ಮರಾಠ ಪಕ್ಷದ ಅಭ್ಯರ್ಥಿ ವಿಜಯಕುಮಾರ ಪಾಟೀಲ ಕಣಜಿಕರ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕಳೆದ ಕೆಲ ವರ್ಷಗಳಿಂದ ಜಿಲ್ಲೆ ಅಭಿವೃದ್ಧಿ ಆಗುತ್ತಿಲ್ಲ. ಜನ ಸೇವೆ ಮಾಡಬೇಕು ಎಂಬುದು ನನ್ನ ಮಹದಾಸೆಯಿದೆ. ಹೀಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವು ಖಚಿತವಾಗಿದೆ ಎಂದು ತಿಳಿಸಿದರು.