ಬೀದರ್: 15 ರಿಂದ 18 ವರ್ಷದ ಒಳಗಿನ ಎಲ್ಲ ಮಕ್ಕಳಿಗೂ ಕೋವಿಡ್ ಪ್ರತಿಬಂಧಕ ಲಸಿಕೆ ಕಡ್ಡಾಯವಾಗಿ ಕೊಡಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಸೂಚಿಸಿದರು.
ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ತಹಶೀಲ್ದಾರರು, ಪದವಿಪೂರ್ವ ಕಾಲೇಜು ಪ್ರಾಚಾರ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿಆರ್ಸಿ, ಸಿಆರ್ಸಿ ಅವರೊಂದಿಗೆ ವಿಡಿಯೊ ಸಂವಾದ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈಗಾಗಲೇ 15 ರಿಂದ 18 ವರ್ಷದ ಒಳಗಿನ ಶೇ 80 ರಷ್ಟು ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಪಾಲಕರ ಮನವೊಲಿಸಿ ಬಾಕಿ ಶೇ 20 ರಷ್ಟು ಮಕ್ಕಳಿಗೂ ಲಸಿಕೆ ಕೊಡಿಸಬೇಕು ಎಂದು ಹೇಳಿದರು.
ಲಸಿಕಾಕರಣ ಕಾರ್ಯವನ್ನು ಜವಾಬ್ದಾರಿಯುತವಾಗಿ ಮಾಡಬೇಕು. ಶನಿವಾರ ಶಾಲಾ, ಕಾಲೇಜುಗಳಿಂದ ಹೊರಗುಳಿದ, ಗೈರಾದ ಮಕ್ಕಳ ಮನೆ ಮನೆಗೆ ತೆರಳಿ ಲಸಿಕೆ ಕೊಡಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರತಿಕಾಂತ ಸ್ವಾಮಿ, ಬ್ರಿಮ್ಸ್ ನಿರ್ದೇಶಕ ಡಾ. ಚಂದ್ರಕಾಂತ ಚಿಲ್ಲರ್ಗಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಣಪತಿ ಬಾರಾಟಕೆ ಇದ್ದರು.