ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಳನೇ ವೇತನ ಆಯೋಗ ರಚಿಸಲು ಆಗ್ರಹ

ನವೆಂಬರ್‌ನಲ್ಲಿ ಜನಪ್ರತಿನಿಧಿಗಳಿಗೆ ಮನವಿ: ರಾಜೇಂದ್ರಕುಮಾರ ಗಂದಗೆ
Last Updated 12 ಅಕ್ಟೋಬರ್ 2021, 15:23 IST
ಅಕ್ಷರ ಗಾತ್ರ

ಬೀದರ್‌: ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ರಚಿಸಿ, ವೇತನ ಪರಿಷ್ಕರಿಸಿ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸಭೆಯಲ್ಲಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಹಂತ ಹಂತವಾಗಿ ಸರ್ಕಾರದ ಗಮನ ಸೆಳೆಯಲು ನಿರ್ಣಯಿಸಲಾಗಿದೆ ಎಂದು ತಿಳಿಸಿದ್ದಾರೆ.

ನವೆಂಬರ್‌ನಲ್ಲಿ ರಾಜ್ಯದ ಎಲ್ಲ ಜಿಲ್ಲಾ, ತಾಲ್ಲೂಕು ಘಟಕಗಳಿಂದ ಸಚಿವರು, ಸಂಸದರು, ಶಾಸಕರು ವಿಧಾನ ಪರಿಷತ್ ಸದಸ್ಯರಿಗೆ ಮನವಿ ಸಲ್ಲಿಸಲಾಗುವುದು. ಡಿಸೆಂಬರ್‍ನಲ್ಲಿ ಏಕಕಾಲಕ್ಕೆ ಮಧ್ಯಾಹ್ನದ ಕಚೇರಿಯ ಬಿಡುವಿನ ಅವಧಿಯಲ್ಲಿ ಆಯಾ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರಿಗೆ ಮನವಿ ಪತ್ರ ಅರ್ಪಿಸಲಾಗುವುದು. ಜನವರಿಯಲ್ಲಿ ಮೂರು ದಿನ ಕಪ್ಪು ಪಟ್ಟಿ ಧರಿಸಿ ಕಾರ್ಯ ನಿರ್ವಹಿಸಲಾಗುವುದು. ಆದರೂ, ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ರಾಜ್ಯ ಸಂಘದ ನಿರ್ಣಯದಂತೆ ಮುಂದಿನ ಹೆಜ್ಜೆ ಇರಿಸಲಾಗುವುದು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‍ಪಿಎಸ್) ರದ್ದುಪಡಿಸಿ, ನಿಶ್ಚಿತ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ರಾಜ್ಯದಲ್ಲಿ ಖಾಲಿ ಇರುವ 2.63 ಲಕ್ಷ ನೌಕರರ ಹುದ್ದೆಗಳನ್ನು ಕಾಲ ಮಿತಿಯಲ್ಲಿ ಭರ್ತಿ ಮಾಡಬೇಕು. ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು, ಉಪನ್ಯಾಸಕರ ವರ್ಗಾವಣೆ ಕಾಯ್ದೆ ಜಾರಿ, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಪದವೀಧರ ಶಿಕ್ಷಕರು, ಮುಖ್ಯ ಶಿಕ್ಷಕರ ಸಮಸ್ಯೆ, ವೇತನ ತಾರತಮ್ಯ ಹಾಗೂ ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಬೇಕು ಎನ್ನುವುದು ಸಂಘದ ಬೇಡಿಕೆಗಳಲ್ಲಿ ಸೇರಿವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT