ಕಮಲನಗರ: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಸಂಜೆ ಅಧಿಕಾರಿಗಳ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ತಹಶೀಲ್ದಾರ್ ಕಚೇರಿ ನಿರ್ಮಿಸಲು ಸ್ಥಳದ ಕೊರತೆ ಇದೆ. ತಾಲ್ಲೂಕು ಕಚೇರಿ ಸಂಕೀರ್ಣ ನಿರ್ಮಿಸಲು ವಿಶಾಲವಾದ ನಿವೇಶನ ಬೇಕು. ಕಮಲನಗರ ಪ್ರವಾಸಿ ಮಂದಿರದಲ್ಲಿರುವ ನಿವೇಶನ ಪರಿಶೀಲಿಸಿ ಸೂಕ್ತ ಮಾಹಿತಿ ನೀಡಬೇಕು ಎಂದು ತಹಶೀಲ್ದಾರ್ ಅಮಿತ್ಕುಮಾರ ಕುಲಕರ್ಣಿ ಅವರಿಗೆ ಸಚಿವರು ಸೂಚಿಸಿದರು.
ಇದು ಮಹಾರಾಷ್ಟ್ರದ ಗಡಿಭಾಗಕ್ಕೆ ಹೊಂದಿಕೊಂಡಿರುವ ತಾಲ್ಲೂಕು ಆದ ಕಾರಣ ಕೋವಿಡ್ ಹರಡುವ ಸಾಧ್ಯತೆ ಇರುತ್ತದೆ. ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸುಸಜ್ಜಿತವಾಗಿ ವ್ಯವಸ್ಥೆ ಮಾಡಿಸಬೇಕು ಎಂದು ವೈದ್ಯಾಧಿಕಾರಿ ಡಾ.ಶ್ರೀಮಂತ ಅವರಿಗೆ ಹೇಳಿದರು.
ಬರಗಾಲ ಇರುವುದರಿಂದ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಜಾನುವಾರು ಆರೋಗ್ಯದ ಕುರಿತು ಗಮನ ಹರಿಸಬೇಕು ಎಂದು ಪಶುವೈದ್ಯಾಧಿಕಾರಿ ಸೋಮಶೇಖರ ಅವರಿಗೆ ಹೇಳಿದರು.
ತಹಶೀಲ್ದಾರ್ ಕಚೇರಿಯಲ್ಲಿ ಸಿಬ್ಬಂದಿ ಕೊರತೆ ಗಮನಕ್ಕೆ ತಂದ ತಹಶೀಲ್ದಾರ್ ಅವರಿಗೆ ಹೊಸ ತಾಲ್ಲೂಕು ಘೋಷಣೆ ಆಗಿರುವುದರಿಂದ ಸಿಬ್ಬಂದಿ ನೇಮಕವಾಗಬೇಕಿದೆ. ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುವುದು ಎಂದು ಹೇಳಿದರು.
ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಹಣಮಂತರಾಯ ಕೌಟಗೆ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.