ಬೀದರ್: ಜಿಲ್ಲೆಯಲ್ಲಿ ವಸತಿ ಯೋಜನೆ ಫಲಾನುಭವಿಗಳ ಅನುದಾನಕ್ಕೆ ತಡೆ ಒಡ್ಡಿರುವ ಕುರಿತು ಚರ್ಚಿಸಲು ನಗರದ ಅಕ್ಕ ಮಹಾದೇವಿ ಕಾಲೇಜಿನಲ್ಲಿ ಅಕ್ಟೋಬರ್ 5 ರಂದು ಬೆಳಿಗ್ಗೆ 11ಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ತಿಳಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅಧ್ಯಕ್ಷತೆ ವಹಿಸುವರು. ಶಾಸಕರಾದ ರಾಜಶೇಖರ ಪಾಟೀಲ ಹುಮನಾಬಾದ್, ರಹೀಂಖಾನ್, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ ಪಾಲ್ಗೊಳ್ಳುವರು ಎಂದು ಹೇಳಿದ್ದಾರೆ.
ವಸತಿ ಯೋಜನೆ ಫಲಾನುಭವಿಗಳ ಪಟ್ಟಿಯಿಂದ ಅನೇಕರನ್ನು ಕೈಬಿಟ್ಟಿರುವ ಹಾಗೂ ಅನುದಾನ ತಡೆ ಹಿಡಿದಿರುವ ಕುರಿತು ಚರ್ಚೆ ನಡೆಸಲಾಗುವುದು. ಅನುದಾನ ಬಿಡುಗಡೆಗೆ ಒತ್ತಾಯಿಸಿ ಸಭೆಯ ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಪಕ್ಷದ ಮಾಜಿ ಸಂಸದರು, ಮಾಜಿ ಶಾಸಕರು, ವಿಧಾನ ಪರಿಷತ್ ಮಾಜಿ ಸದಸ್ಯರು, ಚುನಾಯಿತ ಪ್ರತಿನಿಧಿಗಳು, ಮುಖಂಡರು, ಕೆಪಿಸಿಸಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಭಾಗವಹಿಸಬೇಕು ಎಂದು ಕೋರಿದ್ದಾರೆ.