ಜನವಾಡ: ‘ಬರುವ ದಿನಗಳಲ್ಲಿ ಕೊರೊನಾ ಸೋಂಕಿತರಿಗೆ ಗ್ರಾಮಗಳಲ್ಲೇ ಆಮ್ಲಜನಕ ಸಹಿತ ಚಿಕಿತ್ಸೆ ನೀಡಲು ಸಿದ್ಧತೆ ಮಾಡಿಕೊಳ್ಳಬೇಕಾಗಿದೆ’ ಎಂದು ಬೀದರ್ ದಕ್ಷಿಣ ಶಾಸಕ ಬಂಡೆಪ್ಪ ಕಾಶೆಂಪೂರ್ ಹೇಳಿದರು.
ಬೀದರ್ ತಾಲ್ಲೂಕಿನ ಕಾಶೆಂಪೂರ್ (ಪಿ) ಗ್ರಾಮದ ತಮ್ಮ ನಿವಾಸದಲ್ಲಿ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬೀದರ್ ಹಾಗೂ ಹುಮನಾಬಾದ್ ತಾಲ್ಲೂಕು ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಮ್ಲಜನಕ ಸಾಂದ್ರಕಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಮಾಡಿಕೊಳ್ಳಬೇಕಾದ ಸಿದ್ಧತೆ, ಆಸ್ಪತ್ರೆಗಳಿಗೆ ಕಲ್ಪಿಸಬೇಕಾದ ಸೌಲಭ್ಯಗಳ ಕುರಿತು ಶಾಸಕರು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಎರಡು ಕಡೆ ಜನರೇಟರ್ ಬೇಕಾಗಿದೆ. ಅನೇಕ ಕಡೆ ಆಮ್ಲಜನಕ ಸಾಂದ್ರಕಗಳ ಅವಶ್ಯಕತೆ ಇದೆ ಎಂದು ಅಧಿಕಾರಿಗಳು ಈ ವೇಳೆ ಮಾಹಿತಿ ನೀಡಿದರು.
ಆದಷ್ಟು ಬೇಗ ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲಾಗುವುದು ಎಂದು ಅವರು ಹೇಳಿದರು.
ಅದಕ್ಕಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಶಾಸಕರ ನಿಧಿಯಿಂದ ಅಗತ್ಯ ಅನುದಾನ ಕೊಡುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಬೀದರ್ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಸಂಗಾರೆಡ್ಡಿ, ಹುಮನಾಬಾದ್ ತಾಲ್ಲೂಕು ಆಸ್ಪತ್ರೆಯ ಸಚಿನ್ ಪಾಟೀಲ, ಬಗದಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಶ್ರೀಮಂತ ಇದ್ದರು.