ಬಸವ ಕಲ್ಯಾಣ (ಬೀದರ್ ಜಿಲ್ಲೆ): ಕೋವಿಡ್ನಿಂದ ನಿಧನರಾಗಿದ್ದ ಶಾಸಕ ಬಿ.ನಾರಾಯಣರಾವ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಲ್ಲಿಯ ರಾಷ್ಟ್ರೀಯ ಹೆದ್ದಾರಿ ಸಮೀಪದ ಆಟೊ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ನೆರವೇರಿತು.
ಬೆಂಗಳೂರಿನಿಂದಮಧ್ಯಾಹ್ನ 12 ಗಂಟೆಗೆ ಅವರ ಪಾರ್ಥಿವ ಶರೀರ ತರುತ್ತಿದ್ದಂತೆಯೇ ಕುಟುಂಬದವರು, ನೆಂಟರಿಷ್ಟರು ಹಾಗೂ ಬೆಂಬಲಿಗರ ಆಕ್ರಂದನ ಮುಗಿಲು ಮುಟ್ಟಿತು.
ಜಿಲ್ಲಾಧಿಕಾರಿ ರಾಮಚಂದ್ರನ್ ಆರ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮೊದಲಾದವರು ಪಾರ್ಥಿವ ಶರೀರದ ಮೇಲೆ ಪುಷ್ಪಗುಚ್ಛಗಳನ್ನಿಟ್ಟು ಅಂತಿಮ ನಮನ ಸಲ್ಲಿಸಿದರು.
ನಂತರ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ, ಪುತ್ರರಾದ ಗೌತಮ ಹಾಗೂ ರಾಹುಲ್ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿತು. ಪಿಪಿಇ ಕಿಟ್ ಧರಿಸಿದ್ದ ವೈದ್ಯಕೀಯ ಸಿಬ್ಬಂದಿ ಪಾರ್ಥಿವ ಶರೀರದ ಅಂತ್ಯಕ್ರಿಯೆ ಪ್ರಕ್ರಿಯೆಯನ್ನು ನೆರವೇರಿಸಿದರು.