‘ಕೋವಿಡ್-19 ಮಾರ್ಗಸೂಚಿಯನ್ವಯ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಪಿಆರ್ಒ ಹಾಗೂ ಎಪಿಆರ್ಒ ಇನ್ನಿತರ ಅಧಿಕಾರಿಗಳು ಕಡ್ಡಾಯ ಮಾಸ್ಕಗಳನ್ನು ಧರಿಸಿ, ಸ್ಯಾನಿಟೈಸರ್ ಬಳಸಿ ಕಾರ್ಯ ನಿರ್ವಹಿಸಬೇಕು. ಮತದಾನ ಕೇಂದ್ರಕ್ಕೆ ಬರುವ ಮತದಾರರಿಗೆ ಕಡ್ಡಾಯ ತಪಾಸಣೆ ನಡೆಸಿ ಮತಗಟ್ಟೆಯೊಳಗೆ ಪ್ರವೇಶಿಸುವಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಸೂಚಿಸಿದರು.
ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ನಗರದ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.
‘ಅಧಿಕಾರಿಗಳು ಮತದಾನ ದಿನದಂದು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಬೇಕು ಹಾಗೂ ಮತದಾನ ಕಾರ್ಯವು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.
ಮಾಸ್ಟರ್ ಟ್ರೇನರ್ ಡಾ.ಗೌತಮ ಅರಳಿ ಅವರು ಮತದಾನ ಕೇಂದ್ರದಲ್ಲಿ ನಿರ್ವಹಿಸುವ ಕಾರ್ಯ ವಿಧಾನಗಳ ಬಗ್ಗೆ ಮತಗಟ್ಟೆ ಅಧಿಕಾರಿಗಳಿಗೆ ವಿವರವಾಗಿ ತಿಳಿಸಿದರು.
ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ್ದ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಬ್ಯಾಲೆಟ್ ಬಾಕ್ಸ್ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ತಹಶೀಲ್ದಾರ್ ಗಂಗಾದೇವಿ, ಮಾಸ್ಟರ್ ಟ್ರೇನರ್ ರಮೇಶ ಮಠಪತಿ ಇದ್ದರು.