ಜಿಲ್ಲಾ ಉಸ್ತುವಾರಿ ಸಚಿವರ ತವರು ಕ್ಷೇತ್ರ ಔರಾದ್ ಸೇರಿದಂತೆ ಜಿಲ್ಲೆಯಾದ್ಯಂತ ಸೋಯಾಬೀನ್ ಬೀಜದ ಅಭಾವ ಉಂಟಾಗಿದೆ. ಎರಡು ವಾರಗಳಿಂದ ರೈತರು ಬೀಜಕ್ಕಾಗಿ ನಿತ್ಯ ರೈತ ಸಂಪರ್ಕ ಕೇಂದ್ರಕ್ಕೆ ಅಲೆದಾಡುತ್ತಿದ್ದಾರೆ. ಕೃಷಿ ಅಧಿಕಾರಿಗಳಿಗೆ ಘೇರಾವ್ ಹಾಕಿ, ರೈತ ಸಂಪರ್ಕ ಕೇಂದ್ರದ ಎದುರು ಪ್ರತಿಭಟನೆಯನ್ನೂ ಮಾಡಿದ್ದಾರೆ. ಆದರೂ, ಸರ್ಕಾರ ಈವರೆಗೆ ಬಿತ್ತನೆ ಬೀಜ ಪೂರೈಕೆಗೆ ಕ್ರಮ ಕೈಗೊಂಡಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.