ಬೀದರ್: ವಿದ್ಯಾರ್ಥಿಗಳು ಸಮಾಜ ಗುರುತಿಸುವಂತಹ ಸಾಧನೆ ಮಾಡಬೇಕು ಎಂದು ಯುವಾ ಬ್ರಿಗೇಡ್ ಸಂಸ್ಥಾಪಕರೂ ಆದ ಚಿಂತಕ ಸೂಲಿಬೆಲೆ ಚಕ್ರವರ್ತಿ ಹೇಳಿದರು.
ನಗರದ ಪ್ರತಾಪನಗರದ ಜನಸೇವಾ ಶಿಶು ಮಂದಿರ, ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಾಲಕರು ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಸಾಕಷ್ಟು ಪ್ರಯತ್ನ ಪಡುತ್ತಾರೆ. ಕಾರಣ, ಮಕ್ಕಳು ಅವರ ಆಶಯ ಈಡೇರಿಕೆಗೆ ಶ್ರಮಿಸಬೇಕು. ಆದರ್ಶ ಪ್ರಜೆಗಳಾಗಲು ಪ್ರಯತ್ನಿಸಬೇಕು ಎಂದು ಸಲಹೆ ಮಾಡಿದರು.
ಇತರರಿಗಾಗಿ ಬದುಕುವವರು ಎಲ್ಲರ ಹೃದಯದಲ್ಲಿ ಅಜರಾಮರ ಆಗಿ ಉಳಿಯುತ್ತಾರೆ. ಹೀಗಾಗಿ ಪರೋಕಾರದ ಕಾರ್ಯಗಳನ್ನು ಮಾಡಬೇಕು ಎಂದು ತಿಳಿಸಿದರು.
ಜನಸೇವಾ ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ನೈತಿಕ ಮೌಲ್ಯಗಳನ್ನು ಕೂಡ ಹೇಳಿಕೊಡಲಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜನಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ಮಾತನಾಡಿ, ಸೂಲಿಬೆಲೆ ಚಕ್ರವರ್ತಿ ಅವರು ನಾಡಿನ ಖ್ಯಾತ ಚಿಂತಕರಲ್ಲಿ ಒಬ್ಬರಾಗಿದ್ದಾರೆ. ಯುವಾ ಬ್ರಿಗೇಡ್ ಮೂಲಕ ಯುವಕರಿಗೆ ಹತ್ತು ಹಲವು ಪ್ರೇರಣಾತ್ಮಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಯುವಜನರಿಗೆ ಸನ್ಮಾರ್ಗ ತೋರುತ್ತಿದ್ದಾರೆ ಎಂದು ತಿಳಿಸಿದರು.
ಛಲವಿದ್ದರೆ ಜೀವನದಲ್ಲಿ ಏನು ಬೇಕಾದರೂ ಸಾಧಿಸಬಹುದು. ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮ, ಸಮಯಪ್ರಜ್ಞೆ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಜನಸೇವಾ ಪ್ರತಿಷ್ಠಾನದ ಅಧ್ಯಕ್ಷ ಬಸವರಾಜ ಸ್ವಾಮಿ, ಖಜಾಂಚಿ ಶಿವರಾಜ ಹುಡೇದ್, ಸದಸ್ಯ ಶಿವಲಿಂಗಪ್ಪ ಜಲಾದೆ, ಏಕತಾ ಫೌಂಡೇಷನ್ ಅಧ್ಯಕ್ಷ ರವೀಂದ್ರ ಸ್ವಾಮಿ, ವೀರೇಶ ಸ್ವಾಮಿ, ಗಣಪತಿ ಹಡಪದ, ಶಾಲೆ ಆಡಳಿತಾಧಿಕಾರಿ ಸೌಭಾಗ್ಯವತಿ ಉಪಸ್ಥಿತರಿದ್ದರು.
ಮುಖ್ಯಶಿಕ್ಷಕ ಶಿವಾನಂದ ಮಲ್ಲಾ ನಿರೂಪಿಸಿದರು. ಶಿಕ್ಷಕಿ ವನಜಾಕ್ಷಿ ವಂದಿಸಿದರು. ಪ್ರಾರಂಭದಲ್ಲಿ ಮಕ್ಕಳಿಂದ ಸರಸ್ವತಿ ಪ್ರಾರ್ಥನೆ ನಡೆಯಿತು.