ಬೀದರ್: ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಫೆ. 26ರಂದು ಬಸವಕಲ್ಯಾಣದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಸಿದ್ದರಾಮಯ್ಯನವರ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕಾರಣಾಂತರಗಳಿಂದ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.18ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 12ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ನಿರ್ಣಯ ಅಂಗೀಕರಿಸಲಾಗಿತ್ತು. 2013ರಲ್ಲಿ ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯನವರು ಅಧಿಕಾರ ಸ್ವೀಕರಿಸಿದ್ದರು. ಬಸವತತ್ವವನ್ನು ಪಾಲಿಸುತ್ತಿರುವ ಮತ್ತು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ, ಕಾಲೇಜುಗಳಲ್ಲಿ ಅಣ್ಣ ಬಸವಣ್ಣನವರ ಭಾವಚಿತ್ರ ಹಾಕುವುದನ್ನು ಕಡ್ಡಾಯ ಮಾಡಿರುವ ಸಿದ್ದರಾಮಯ್ಯ ಅವರನ್ನು ಬಸವಣ್ಣನವರ ಕರ್ಮಭೂಮಿ, ಶರಣರ ನಾಡು ಬಸವಕಲ್ಯಾಣದಲ್ಲಿಯೇ ಅಭಿನಂದಿಸಲು ತೀರ್ಮಾನಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಕಾರ್ಯಕ್ರಮ ಮುಂದೂಡಲಾಗಿದ್ದು, ಶೀಘ್ರವೇ ಮುಂದಿನ ದಿನಾಂಕ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.