ಬೀದರ್: ಸಾಧನೆಗೆ ಸಂಕಲ್ಪ ಮಾಡಿದ್ದಲ್ಲಿ ಅದಕ್ಕೆ ಬಡತನ ಅಡ್ಡಿಯಾಗದು ಎಂದು ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು.
ಇಲ್ಲಿಯ ಹಿರೇಮಠ ಸಂಸ್ಥಾನ ವಿದ್ಯಾಪೀಠ ಸಂಸ್ಥೆಯ ಸಂಚಾಲಿತ ಡಾ ತೋಂಟದ ಸಿದ್ಧಲಿಂಗ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೆಲ ವರ್ಷಗಳ ಹಿಂದಷ್ಟೇ ಆರಂಭವಾದ ಶಾಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಫಲಿತಾಂಶ ಬಂದಿರುವುದು ಬಹಳ ಖುಷಿ ತಂದಿದೆ. ಪರೀಕ್ಷೆಗೆ ಹಾಜರಾದ 20 ವಿದ್ಯಾರ್ಥಿಗಳಲ್ಲಿ 13 ಅಗ್ರಶ್ರೇಣಿ ಹಾಗೂ 7 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲೆಗೆ ಉತ್ತಮ ಫಲಿತಾಂಶ ಬರುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ ಎಂದರು.
ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ ಮಾತನಾಡಿದರು. ಹಿರೇಮಠ ಸಂಸ್ಥಾನದ ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ, ಉದ್ಯಮಿ ಜಯರಾಜ್ ಖಂಡ್ರೆ, ಸಂಸ್ಥೆಯ ನಿರ್ದೇಶಕ ಶಶಿಧರ ಕೋಸಂಬೆ, ಸ್ಥಾನಿಕ ಕಮಿಟಿ ಅಧ್ಯಕ್ಷ ಸಂಗ್ರಾಮಪ್ಪ ಬಿರಾದಾರ್, ಉಮಾಕಾಂತ ಮೀಸೆ ಇದ್ದರು.