ಭಾಲ್ಕಿ: ‘ವಿದ್ಯಾರ್ಥಿಗಳು ಜೀವನದಲ್ಲಿ ಹಣೆಬರಹ ನೆಚ್ಚಿಕೊಂಡರೆ ಏನನ್ನೂ ಸಾಧಿಸಲು ಸಾಧ್ಯವಾಗುವುದಿಲ್ಲ. ನಿರಂತರ ಪ್ರಯತ್ನದಿಂದ ಗುರಿ ಸಾಧಿಸಲು ಸಾಧ್ಯವಾಗುತ್ತದೆ’ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು.
ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ವಾಣಿಜ್ಯ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಸಾಧನೆ ಎನ್ನುವುದು ಪ್ರಯತ್ನವಾದಿಗಳ ಸ್ವತ್ತು. ಯಾರು ಜೀವನದಲ್ಲಿ ಕಷ್ಟ ಪಡುತ್ತಾರೆ ಅಂತವರನ್ನು ಯಶಸ್ಸು ಹಿಂಬಾಲಿಸುತ್ತದೆ. ವಿದ್ಯಾರ್ಥಿಗಳು ಯಾವುದೇ ದುಶ್ಚಟ, ಆಕರ್ಷಣೆಗಳಿಗೆ ಬಲಿಯಾಗಬಾರದು. ಓದಿನ ಕಡೆಗೆ ಸಂಪೂರ್ಣ ಮನಸ್ಸು ಕೇಂದ್ರಿಕರಿಸಬೇಕು’ ಎಂದು ತಿಳಿಸಿದರು.
‘ವಾಣಿಜ್ಯ ವಿಭಾಗದಲ್ಲಿ ವಿಪುಲ ಅವಕಾಶಗಳಿವೆ. ಮುಂದಿನ ದಿನಗಳಲ್ಲಿ ನಮ್ಮ ಸಂಸ್ಥೆಯಲ್ಲಿ ಸಿಎ ತರಬೇತಿ ನೀಡುವ ಉದ್ದೇಶ ಹೊಂದಲಾಗಿದೆ’ ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಣಮಂತ ಕೌಟಗೆ ಮಾತನಾಡಿ, ‘ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದಲ್ಲಿ ಸಮಾಜ ಗೌರವ ನೀಡುತ್ತದೆ. ಶಿಕ್ಷಕರು ಮತ್ತು ಪಾಲಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಕೊಳ್ಳಬೇಕು’ ಎಂದು ತಿಳಿಸಿದರು.
ಸಿಆರ್ಪಿ ನೀಲಕಂಠ ಮಾತನಾಡಿದರು. ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪ್ರೇಮ ಪಾಂಡುರಂಗ, ಆನಂದ ಸಿದ್ರಾಮ, ಸೃಷ್ಟಿ ರಾಜಕುಮಾರ ಸೇರಿದಂತೆ ಇತರರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.