ಹುಮನಾಬಾದ್: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ತಾಲ್ಲೂಕಿನ ಸೀತಾಳಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಂಬೂರ್ ಗ್ರಾಮದಲ್ಲಿ ಮಂಗಳವಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕೆಲ ಸದಸ್ಯರನ್ನು ದೇವಸ್ಥಾನದಲ್ಲಿ ಕೂಡಿ ಹಾಕಿ, ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
‘ನಿಂಬೂರ್ ಗ್ರಾಮದಲ್ಲಿ 15 ದಿನಗಳಿಂದ ನೀರಿನ ಸಮಸ್ಯೆ ತಲೆದೋರಿದೆ.
ಆದರೆ, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ’ ಎಂದು ಗ್ರಾಮಸ್ಥರು ತಿಳಿಸಿದರು.
‘ರೈತರ ಪಾಲಿಗೆ ಕಾರ ಹುಣ್ಣಿಮೆ ಮಹತ್ವದ ಹಬ್ಬ. ಆದರೆ, ಎತ್ತುಗಳ ಮೈ ತೊಳೆಯಲು ನೀರೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ರೈತ ಕಾಶಪ್ಪ ಬೇಸರ ವ್ಯಕ್ತಪಡಿಸಿದರು.
‘ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ನಡೆಯುತ್ತಿರುವ ಕಾರಣ ನೀರಿನ ಸಮಸ್ಯೆಯಾಗಿದೆ. ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಕಾರ ಹುಣ್ಣಿಮೆ ಇದ್ದ ಕಾರಣ ಸಮಸ್ಯೆಯಾಗಿದೆ’ ಎಂದು ಪಿಡಿಒ ಸವಿತಾ ಅವರು ತಿಳಿಸಿದರು.