ಬೀದರ್: ಜೇಷ್ಠತೆ ಆಧರಿಸಿ ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.
ಪಿಂಚಣಿ ಸೌಲಭ್ಯ ಒದಗಿಸಬೇಕು. ಇಎಸ್ಐ, ಭವಿಷ್ಯ ನಿಧಿ ಯೋಜನೆ ಜಾರಿಗೊಳಿಸಬೇಕು. ಎಲ್ಕೆಜಿ, ಯುಕೆಜಿ ತರಗತಿಗಳನ್ನು ಅಂಗನವಾಡಿಗಳಲ್ಲೇ ಆರಂಭಿಸಬೇಕು. ಅಧಿಕಾರಿಗಳ ದಬ್ಬಾಳಿಕೆ ನಿಲ್ಲಿಸಬೇಕು. ಗುಣಮಟ್ಟದ ಆಹಾರ ಪೂರೈಸಬೇಕು ಎಂದು ಒತ್ತಾಯಿಸಿದರು.
ಫೆಡರೇಷನ್ ಜಿಲ್ಲಾ ಸಂಚಾಲಕ ಶಿವರಾಜ ಕಟಗಿ, ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪಾಲ್ಗೊಂಡಿದ್ದರು.