ಮಂಗಳವಾರ, ಮಾರ್ಚ್ 28, 2023
22 °C

ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ಆರೋಪ: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

 

ಬೀದರ್‌: ‘ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ’ ಎಂದು ಹೇಳಿಕೆ ನೀಡಿರುವ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬಧವಾರ ಪ್ರತಿಭಟನೆ ನಡೆಸಿದರು.

ಬಿಜೆಪಿ ಎಸ್‌ಸಿ ಮೋರ್ಚಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನಗರದ ಬಿ.ಆರ್.ಅಂಬೇಡ್ಕರ್‌ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದರು. ಪಕ್ಷದ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಿಜೆಪಿ ಕಲಬುರ್ಗಿ ವಿಭಾಗದ ಸಹ ಪ್ರಮುಖ ಈಶ್ವರಸಿಂಗ್ ಠಾಕೂರ್‌ ಮಾತನಾಡಿ, ‘ವಿವಾದಾತ್ಮಕ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದರು.

ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿ‘ಬಿಜೆಪಿ ಎಲ್ಲ ಸಮುದಾಯವರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ರಾಜಕೀಯ ಕಾರಣಕ್ಕೆ ಸಿದ್ದರಾಮಯ್ಯ ಹೇಳಿಕೆ ನೀಡಿರುವುದು ಸರಿಯಲ್ಲ’ ಎಂದರು.

ನಂತರ ಸಿದ್ದರಾಮಯ್ಯ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಹೇಶ ಸ್ವಾಮಿ, ಬಾಬುರಾವ್‌ ಕಾರಬಾರಿ, ಜಯಕುಮಾರ ಕಾಂಗೆ, ಲುಂಬಿಣಿ ಗೌತಮ ಹಾಗೂ ಎಸ್‌ಸಿ ಮೋರ್ಚಾದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.