ಬೀದರ್: ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಬೇಕು. ಸೇವೆ ಕಾಯಂಗೊಳಿಸಬೇಕು ಎನ್ನುವುದು ಸೇರಿದಂತೆ 14 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರು ಬುಧವಾರ ಕೈಗೆ ಕಪ್ಪು ಪಟ್ಟಿ ಧರಿಸಿ ಕಾರ್ಯ ನಿರ್ವಹಿಸುವ ಮೂಲಕ ಪ್ರತಿಭಟನೆ ನಡೆಸಿದರು.
ಇಲ್ಲಿಯ ಕುಂಬಾರವಾಡದ ಪ್ರಾಥಮಿಕ ಆರೋಗ್ಯ ಕೇಂದ್ರದ ನೌಕರರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘದ ಉಮೇಶ ಬಿರಾದಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಹರಿಯಾಣ ಮಾದರಿಯಲ್ಲಿ ಎಚ್.ಆರ್. ನಿಯಮ ರಚಿಸಬೇಕು. ಏಕರೂಪದ ವೇತನ ಕೊಡಬೇಕು. ವಿಮೆ ಸೌಲಭ್ಯ ಕಲ್ಪಿಸಬೇಕು ಎಂದು ಉಮೇಶ ಒತ್ತಾಯಿಸಿದರು.
ಮೇ 21 ರವರೆಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಮಾಡಲಾಗುವುದು. ಸರ್ಕಾರ ಬೇಡಿಕೆಗೆ ಸ್ಪಂದಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.