ಬೀದರ್: ರಾಯಚೂರಿನ ಖಾಸಗಿ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣೀಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ರವಾನಿಸಿದರು.
ವಿದ್ಯಾರ್ಥಿನಿ ಕೊಲೆ ಪ್ರಕರಣ ನಡೆದು 10 ದಿನಗಳಾದರೂ ಆಕೆಯ ಕುಟುಂಬಕ್ಕೆ ನ್ಯಾಯ ದೊರಕಿಲ್ಲ ಎಂದು ದೂರಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ದಿನೇ ದಿನೇ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ದೋಸ್ತಿ ಸರ್ಕಾರ ಕುರ್ಚಿ ಉಳಿಸಿಕೊಳ್ಳುವುದರಲ್ಲಿಯೇ ಕಾಲಹರಣ ಮಾಡುತ್ತಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸಹ ಸಂಚಾಲಕ ರೇವಣಸಿದ್ದ ಜಾಡರ್ ಆರೋಪಿಸಿದರು.
ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಪರಿಷತ್ತಿನ ಆನಂದ ಡೋಬಾಳೆ, ಅರವಿಂದ ಸುಂದಾಳಕರ್, ಸಾಯಿ ಮೂಲಗೆ, ಉಮೇಶ ತೆಲಂಗ, ಗಗನದೀಪ, ಮಲ್ಲಿಕಾರ್ಜುನ ಟೇಕರಾಜ, ರಾಜಶೇಖರ ಗಾಯಕವಾಡ, ಮಹಮ್ಮದ್ ಗಫಾರ್, ಆಕಾಶ ಬೆಳ್ಳೂರೆ, ಸಂಗಮೇಶ, ದಿವ್ಯಾರಾಣಿ, ಆರತಿ, ಗಿರಿಜಾ, ಅಖಿಯಾ, ಸಂಜನಾ, ರೇಖಾ, ಪ್ರೀತಿ, ಶ್ರುತಿ ಮೊದಲಾದವರು ಭಾಗವಹಿಸಿದ್ದರು.