ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಜಿಲ್ಲೆಯ ಲಾಕ್‌ಡೌನ್‌ಗೆ ಜನಪ್ರತಿನಿಧಿಗಳ ಒಕ್ಕೊರಲ ಮನವಿ

ಸಚಿವ ಪ್ರಭು ಚವಾಣ್‌ರಿಂದ ಇಂದು ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಸಾಧ್ಯತೆ
Last Updated 13 ಜುಲೈ 2020, 16:18 IST
ಅಕ್ಷರ ಗಾತ್ರ

ಬೀದರ್‌: ಕೋವಿಡ್ 19 ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಲಾಕ್‌ಡೌನ್‌ ಮಾಡಬೇಕು ಎಂದು ಜಿಲ್ಲೆಯ ಜನಪ್ರತಿನಿಧಿಗಳು ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಒಕ್ಕೊರಲಿನಿಂದ ಮನವಿ ಮಾಡಿದರು.

ಲಾಕ್‌ಡೌನ್‌ ಮಾಡುವ ಮೊದಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳಬೇಕು. ಜನ ಆಹಾರಕ್ಕಾಗಿ ಅಲೆದಾಡುವಂತಾಗಬಾರದು. ಪೊಲೀಸ್ ಬಂದೋಬಸ್ತ್‌ ಸಹ ಉತ್ತಮವಾಗಿರುವಂತೆ ನೋಡಿಕೊಳ್ಳಬೇಕು. ಪೂರ್ವ ಸಿದ್ಧತೆ ಮಾಡಿಕೊಂಡ ನಂತರವೇ ಲಾಕ್‌ಡೌನ್‌ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

‘ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಜತೆ ಅದರಿಂದ ಸಾವಿಗೀಡಾಗುವವರ ಸಂಖ್ಯೆಯೂ ಅಧಿಕ ಆಗಿದೆ. ಹೀಗಾಗಿ ಮಾಸ್ಕ್‌ ಬಳಕೆ, ಅಂತರ ಪಾಲನೆ ಹಾಗೂ ವೈಯಕ್ತಿಕ ಸ್ವಚ್ಛತೆಯ ಬಗೆಗೆ ಜನರಲ್ಲಿ ಹೆಚ್ಚಿನ ತಿಳಿವಳಿಕೆ ಮೂಡಿಸಬೇಕು. ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಪೊಲೀಸ್ ಎರಡೂ ಜಿಲ್ಲಾಡಳಿತದ ಜತೆಗೆ ಸಮರ್ಪಕ ಕಾರ್ಯ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಶಾಸಕರಾದ ಬಂಡೆಪ್ಪ ಕಾಶೆಂಪೂರ, ಈಶ್ವರ ಖಂಡ್ರೆ, ವಿಧಾನ ಪರಿಷತ್ ಸದಸ್ಯರಾದ ರಘುನಾಥ ಮಲ್ಕಾಪುರೆ ಹಾಗೂ ಅರವಿಂದಕುಮಾರ ಅರಳಿ ಸಲಹೆ ನೀಡಿದರು.

‘ಈ ಮೊದಲು ಸಹ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಾಕ್‌ಡೌನ್‌ಗೆ ಸಂಬಂಧಿಸಿದಂತೆ ಸಭೆ ನಡೆಸಲಾಗಿತ್ತು. ಇದೀಗ ಅನುಭವಗಳೊಂದಿಗೆ 110 ದಿನಗಳ ನಂತರ ಇನ್ನೊಂದು ಲಾಕ್‌ಡೌನ್‌ ಮಾಡಲು ಹೊರಟಿದ್ದೇವೆ. ಹಿಂದೆ ನಡೆದ ತಪ್ಪುಗಳು ಮರುಕಳಿಸಬಾರದು. ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ತೀರ್ಮಾನ ಕೈಗೊಳ್ಳಬೇಕು’ ಎಂದು ಬಂಡೆಪ್ಪ ಕಾಶೆಂಪೂರ ಮನವಿ ಮಾಡಿದರು.

ಭಾಲ್ಕಿ ಶಾಸಕ ಈಶ್ವರ ಖಂಡ್ರೆ ವಿಡಿಯೊ ಕಾಲ್‌ನಲ್ಲಿ ಹಾಗೂ ಹುಮನಾಬಾದ್‌ ಶಾಸಕ ರಾಜಶೇಖರ ಪಾಟೀಲ ಅವರು ಫೋನ್‌ಮಾಡಿ ಕೋವಿಡ್‌ ಸೋಂಕು ಹರಡುವಿಕೆ ನಿಯಂತ್ರಿಸಲು ಜಿಲ್ಲೆಯನ್ನು ಲಾಕ್‌ಡೌನ್‌ ಮಾಡಬೇಕು ಎಂದು ಸಲಹೆ ನೀಡಿದರು.

‘ಜಿಲ್ಲಾಧಿಕಾರಿ, ಸಿಇಒ, ಎಸ್‌ಪಿ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಕೋವಿಡ್ ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಬಗ್ಗೆ ನಿತ್ಯ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಸರ್ಕಾರದಿಂದ ಬರುವ ಅನುದಾನ ಸಮರ್ಪಕ ಬಳಕೆ, ರೋಗಿಗಳಿಗೆ ಹಾಗೂ ಕ್ವಾರಂಟೈನ್‌ನಲ್ಲಿ ಇರುವವರಿಗೆ ಉತ್ತಮ ಚಿಕಿತ್ಸೆಗೆ ಸೂಚನೆ ನೀಡಲಾಗಿದೆ’ ಎಂದು ಸಚಿವ ಪ್ರಭು ಚವಾಣ್ ತಿಳಿಸಿದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮಾತನಾಡಿ, ‘ಕೋವಿಡ್ ರೋಗಿಗಳ ಚಿಕಿತ್ಸೆಗೆ ಅನುಕೂಲವಾಗುವಂತೆ ವೆಂಟಿಲೇಟರ್‌ಗಳನ್ನು ಪಡೆದುಕೊಳ್ಳಲಾಗಿದೆ. ಶಾಸಕರ ಅನುಮತಿ ಪಡೆದು ಮೈಕ್ರೋ ಯೋಜನೆಯಡಿ ಅಗತ್ಯ ಉಪಕರಣಗಳ ಖರೀದಿಗೆ ಪ್ರಸ್ತಾವ ಕಳಿಸಲಾಗಿದೆ. ಸರ್ಕಾರ, ಕಾಲಕಾಲಕ್ಕೆ ನೀಡುವ ಎಲ್ಲ ಸೌಕರ್ಯಗಳನ್ನು ಕೋವಿಡ್ ರೋಗಿಗಳಿಗೆ ಪ್ರಾಮಾಣಿಕವಾಗಿ ತಲುಪಿಸಲಾಗುತ್ತಿದೆ’ ಎಂದು ತಿಳಿಸಿದರು.

‘ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್‌.ನಾಗೇಶ, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್‌ ಉಪ ವಿಭಾಗಾಧಿಕಾರಿ ಅಕ್ಷಯ ಶ್ರೀಧರ್, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭಂವರ್‌ಸಿಂಗ್ ಮೀನಾ, ಡಿಎಚ್‌ಒ, ಡಿಎಸ್‌ಒ ನೇತೃತ್ವದಲ್ಲಿ ರಚಿಸಿದ 14 ತಂಡಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಮುಂದೆಯೂ ಯುದ್ಧೋಪಾದಿಯಲ್ಲಿ ಕೋವಿಡ್ ತಡೆ ಕಾರ್ಯ ನಿರ್ವಹಣೆಯಲ್ಲಿ ತೊಡಗಿಸಿಕೊಳ್ಳಲಾಗುವುದು’ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ಮಾತನಾಡಿ, ‘ಜಿಲ್ಲೆಯಲ್ಲಿನ ಎಲ್ಲ ಠಾಣೆಗಳಿಗೆ ಸ್ಯಾನಿಟೈಜರ್ ವಿತರಿಸಲಾಗಿದೆ. ಎಲ್ಲ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಬಟ್ಟೆಯ ಮಾಸ್ಕ್‌ ವಿತರಿಸಿ ಸುರಕ್ಷತೆಗೆ ಒತ್ತು ಕೊಡಲಾಗಿದೆ’ ಎಂದು ಸಭೆಗೆ ಮಾಹಿತಿ ನೀಡಿದರು.

ಒಂದು ವಾರ ಲಾಕ್‌ಡೌನ್‌!

ಬೀದರ್‌: ‘ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್‌ ಮಾಡುವಂತೆ ಚುನಾಯಿತ ಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದಲೂ ಒತ್ತಡ ಬಂದಿದೆ. ಈಗಾಗಲೇ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದೇನೆ. ಮಂಗಳವಾರ ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಇನ್ನೊಂದು ಸುತ್ತು ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಜಿಲ್ಲೆಯಲ್ಲಿ ಲಾಕ್‌ಡೌನ್‌ ಮಾಡಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಆಯಾ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚಿಸಿ ನಿರ್ಧಾರ ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಮಂಗಳವಾರ ಸಂಜೆ 4.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಎಲ್ಲವನ್ನೂ ಸ್ಪಷ್ಟಪಡಿಸಲಾಗುವುದು’ ಎಂದು ಹೇಳಿದರು.

ಆಯಾ ತಾಲ್ಲೂಕಿನಲ್ಲೇ ಕ್ವಾರಂಟೈನ್

ಬೀದರ್‌: ಕೋವಿಡ್‌ 19 ಸೋಂಕಿತರನ್ನು ಬೀದರ್‌ಗೆ ತರುತ್ತಿರುವ ಕಾರಣ ಬೇರೆ ತಾಲ್ಲೂಕುಗಳ ಜನ ಆತಂಕಕ್ಕೆ ಒಳಗಾಗುತ್ತಿದ್ದಾರೆ. ಜನರ ಆತಂಕ ಕಡಿಮೆ ಮಾಡುವ ದಿಸೆಯಲ್ಲಿ ಪ್ರತಿ ತಾಲ್ಲೂಕಿನಲ್ಲಿ ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ತಿಳಿಸಿದರು.

ಈಗಾಗಲೇ ಬೀದರ್, ಹುಮನಾಬಾದ್, ಚಿಟಗುಪ್ಪ ಹಾಗೂ ಭಾಲ್ಕಿಯಲ್ಲಿ ಕೋವಿಡ್‌ ಚಿಕಿತ್ಸಾ ಕೇಂದ್ರಗಳಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ಥಿತಿವಂತರು ಮನೆಯಲ್ಲಿ ಉಳಿದುಕೊಳ್ಳುವುದಾದರೆ ಅವರ ಮೇಲೆ ನಿಗಾ ಇಡಲಾಗುವುದು. ಕಡು ಬಡವರು, ಮನೆಯಲ್ಲಿ ಪ್ರತ್ಯೇಕವಾಗಿ ಉಳಿದುಕೊಳ್ಳಲು ವ್ಯವಸ್ಥೆ ಇಲ್ಲದವರಿಗೆ ಮಾತ್ರ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲು ಚಿಂತನೆ ನಡೆಸಲಾಗಿದೆ. ಅವರಿಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗುವುದು ಎಂದು ಹೇಳಿದರು.

‘ರೋಗಿಗಳ ಚಿಕಿತ್ಸೆಗೆ ಔಷಧಗಳ ಕೊರತೆ ಇಲ್ಲ. ಹಣಕಾಸಿನ ಕೊರತೆಯೂ ಇಲ್ಲ. ಜಿಲ್ಲೆಗೆ ₹ 6.5 ಕೋಟಿ ಬಂದಿದೆ. ಅದರಲ್ಲಿ ₹ 2.80 ಕೋಟಿ ವಿನಿಯೋಗಿಸಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT