ಬೀದರ್: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘವು ಸೆಪ್ಟೆಂಬರ್ನಲ್ಲಿ ನಗರದಲ್ಲಿ ಗ್ರಾಮೀಣ ಯುವಕರ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಿದೆ.
ನಗರದ ಪ್ರವರ್ಧ ಸಂಸ್ಥೆ ಕಚೇರಿಯಲ್ಲಿ ನಡೆದ ಸಂಘದ ಮಾಸಿಕ ಸಭೆಯಲ್ಲಿ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಈ ವಿಷಯ ಪ್ರಕಟಿಸಿದರು.
ಯುವ ಸಬಲೀಕರಣದ ಭಾಗವಾಗಿ ಸಮಾವೇಶ ಆಯೋಜಿಸಲು ತೀರ್ಮಾನಿಸಲಾಗಿದೆ. ಸಮಾವೇಶವು ಸ್ವ ಉದ್ಯೋಗ ಸೇರಿದಂತೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಇರುವ ಅವಕಾಶಗಳ ಬಗ್ಗೆ ಯುವಕರಿಗೆ ಮಾಹಿತಿ ಒದಗಿಸಲಿದೆ ಎಂದು ತಿಳಿಸಿದರು.
ಸೆಪ್ಟೆಂಬರ್ನಲ್ಲೇ ಮಹಿಳೆಯರಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಶೀರ್ಷಿಕೆಯಡಿ ಜಿಲ್ಲೆಯ ಎಂಟೂ ತಾಲ್ಲೂಕುಗಳಲ್ಲಿ ಮಹಿಳಾ ಸಮಾವೇಶಗಳನ್ನು ಸಂಘಟಿಸಲಾಗುವುದು ಎಂದು ಹೇಳಿದರು.
ಕಲ್ಯಾಣ ಕರ್ನಾಟಕದ ಸಮಗ್ರ ವಿಕಾಸವೇ ಸಂಘದ ಗುರಿಯಾಗಿದೆ. ಯುವ, ಮಹಿಳಾ ಸಬಲೀಕರಣ, ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸಂಘದಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡವರಿಗೆ ಯಂತ್ರೋಪಕರಣ, ಸಾಮಗ್ರಿಗಳನ್ನು ಕೊಡಲಾಗಿದೆ ಎಂದು ತಿಳಿಸಿದರು.
ಸಂಘದಿಂದ ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಸಂಘದ ಸಂಚಾಲಿತ ಜಿಲ್ಲೆಯ ಎಲ್ಲ 701 ಪ್ರಗತಿ ಕೇಂದ್ರ ಹಾಗೂ 223 ಕೌಶಲ ಕೇಂದ್ರಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಸಂಘದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ಕೌಶಲ ಕೇಂದ್ರಗಳ ಬಲವರ್ಧನೆ, ಕಿರು ಉತ್ಪನ್ನ, ಸಮಗ್ರ ಕೃಷಿ, ಸಾವಯವ ಕೃಷಿ ಯೋಜನೆ, ಸೃಜನ ದೀಪ್ತಿ ಐದು ಮೊದಲಾದ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಪ್ರವರ್ಧ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಕೌಜಲಗಿ, ಸಮೃದ್ಧಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಪುನೀತ್ ಸಾಳೆ, ಸಂಘದ ಜಿಲ್ಲಾ ಸಂಯೋಜಕ ರೇವಣಸಿದ್ದ ಜಾಡರ್, ಪ್ರಮುಖರಾದ ಬಸವರಾಜ ಅಷ್ಟಗಿ, ಪ್ರಶಾಂತ ಔರಾದ್, ಕಲ್ಪನಾ, ಮಹಾದೇವ, ಸಚಿನ್ ನಾಗೂರೆ ಇದ್ದರು.