ಬೀದರ್: ರಾಜ್ಯದಲ್ಲಿ ಕ್ರೈಸ್ತರ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳ ಕುರಿತು ಜನಪ್ರತಿನಿಧಿಗಳು ವಿಧಾನಸಭೆಯಲ್ಲಿ ಧ್ವನಿ ಎತ್ತಬೇಕು ಎಂದು ಇಂಡಿಯನ್ ಕ್ರಿಶ್ಚಿಯನ್ ವೆಲ್ಫೇರ್ ಅಸೋಸಿಯೇಷನ್ ರಾಜ್ಯ ಘಟಕದ ಅಧ್ಯಕ್ಷ ಸಂಜಯ ಜಾಗೀರದಾರ್ ಒತ್ತಾಯಿಸಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ ಅವರು, ವಿವಿಧೆಡೆ ನಡೆದ ಚರ್ಚ್ಗಳ ಮೇಲಿನ ದಾಳಿ, ಸಭಾಪಾಲಕರು ಹಾಗೂ ಕ್ರೈಸ್ತ ಸಮುದಾಯದವರ ಮೇಲಿನ ಹಲ್ಲೆ ಪ್ರಕರಣಗಳ ಕುರಿತು ಗಮನ ಸೆಳೆದರು.
ಕ್ರೈಸ್ತರು ಶಾಂತಿಪ್ರಿಯರಾಗಿದ್ದಾರೆ. ಕ್ರೈಸ್ತ ಮಿಷನರಿಗಳು ವಿವಿಧ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅಪಾರವಾಗಿದೆ. ಆದರೂ, ಕ್ರೈಸ್ತರ ಮೇಲೆ ಇಲ್ಲಸಲ್ಲದ ಆರೋಪ ಹೊರೆಸಲಾಗುತ್ತಿದೆ. ವಿನಾಕಾರಣ ದೌರ್ಜನ್ಯ ಪ್ರಕರಣಗಳು ಮುಂದುವರಿದಿವೆ ಎಂದು ಹೇಳಿದರು.
ಕ್ರೈಸ್ತರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಲ್ಲೆ ಪ್ರಕರಣಗಳು ಪುನರಾವರ್ತನೆಯಾಗದಂತೆ ನೋಡಿಕೋಳ್ಳಬೇಕು. ಕ್ರೈಸ್ತರಿಗೆ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಿದರು.
ಹುಬ್ಬಳ್ಳಿಯಲ್ಲಿ ಕ್ರೈಸ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸ್ಥಳದಲ್ಲೇ ಹುಬ್ಬಳ್ಳಿಯ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ಪಡೆದರು. ಕ್ರೈಸ್ತರಿಗೆ ರಕ್ಷಣೆ ನೀಡಲು ಸೂಚಿಸಿದರು ಎಂದು ಜಾಹೀರದಾರ್ ತಿಳಿಸಿದ್ದಾರೆ.