ಬೀದರ್: ‘ಹಿಂದೆ ಜಾನಪದವು ಜನರ ಬದುಕಿನ ಭಾಗವಾಗಿತ್ತು. ಆಧುನಿಕತೆಯ ಪ್ರಭಾವದಿಂದಾಗಿ ಇಂದು ಮೂಲ ಸ್ವರೂಪ ಕಳೆದುಕೊಳ್ಳುತ್ತಿದೆ. ಆದ್ದರಿಂದ ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ’ ಎಂದು ಸಾಹಿತಿ ಭಾರತಿ ವಸ್ತ್ರದ ಹೇಳಿದರು.
ನಗರದ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕ ಹಾಗೂ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪ್ರಾದೇಶಿಕ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಈಚೆಗೆ ಆಯೋಜಿಸಿದ್ದ ಜಾನಪದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಆಧುನಿಕತೆಯ ಪ್ರಭಾವದಿಂದಾಗಿ ಕುಟ್ಟುವ, ಬೀಸುವ ಪದಗಳು ಮಾಯವಾಗಿವೆ. ಜಾನಪದ ಸಾಹಿತ್ಯದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಜಾನಪದ ಉಳಿಸುವ ಪ್ರಯತ್ನ ನಡೆದಿರುವುದು ಅಭಿನಂದನಾರ್ಹವಾಗಿದೆ’ ಎಂದರು.
ಮಾತೃಭೂಮಿ ಟ್ರಸ್ಟ್ನ ಕಾರ್ಯದರ್ಶಿ ಗುರುನಾಥ ರಾಜಗೀರಾ ಮಾತನಾಡಿ, ‘ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದಿಂದಾಗಿ ನಮ್ಮ ಮೂಲ ಸಂಸ್ಕೃತಿಗೆ ಧಕ್ಕೆಯಾಗುತ್ತಿದೆ. ನಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕಾಗಿದೆ’ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಾನಪದ ಅಧ್ಯಯನ ಕೇಂದ್ರದ ಸಂಯೋಜನಾಧಿಕಾರಿ ಡಾ. ಜಗನ್ನಾಥ ಹೆಬ್ಬಾಳೆ ಮಾತನಾಡಿ, ‘ಜಾನಪದವು ನಮ್ಮ ನಾಡಿನ ಸಂಸ್ಕೃತಿಯ ಭದ್ರ ಬುನಾದಿಯಾಗಿದೆ’ ಎಂದರು.
ಮದರ್ ತೆರೆಸಾ ಮಹಿಳಾ ಸಂಘದ ನರಸಮ್ಮ , ಶಾಂತಮ್ಮ ಹಾಗೂ ತಂಡದವರು ಜನಪದ ಗೀತೆಗಳನ್ನು ಹಾಡಿದರು.