ಬೀದರ್: ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣಕ್ಕೆ ಒತ್ತಾಯಿಸಿ ಮಾದಿಗ ದಂಡೋರ ಹೋರಾಟ ಸಮಿತಿ ವತಿಯಿಂದ ನವೆಂಬರ್ 11 ರಂದು ಹೈದರಾಬಾದ್ನ ಪೊಲೀಸ್ ಪರೇಡ್ ಮೈದಾನದಲ್ಲಿ ಮಾದಿಗರ ವಿಶ್ವರೂಪ ಮಹಾಸಭಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಫರ್ನಾಂಡೀಸ್ ಹಿಪ್ಪಳಗಾಂವ್ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಮಿತಿಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಮಂದಕೃಷ್ಣ ಮಾದಿಗ ನೇತೃತ್ವ ವಹಿಸಲಿದ್ದಾರೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಲಕ್ಷಾಂತರ ಜನ ಭಾಗವಹಿಸಲಿದ್ದಾರೆ ಎಂದು ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೀದರ್ ಜಿಲ್ಲೆಯಿಂದ 600 ವಾಹನಗಳಲ್ಲಿ 10 ಸಾವಿರಕ್ಕೂ ಹೆಚ್ಚು ಜನ ಸಮಾವೇಶಕ್ಕೆ ತೆರಳಲಿದ್ದಾರೆ ಎಂದರು. ಕರ್ನಾಟಕದಲ್ಲಿ ಒಳ ಮೀಸಲಾತಿಗಾಗಿ 28 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಯಾವ ಸರ್ಕಾರವೂ ಬೇಡಿಕೆಗೆ ಸ್ಪಂದಿಸಿಲ್ಲ. ಹಿಂದಿನ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣ ವರದಿ ಜಾರಿಗೆ ಕೇಂದ್ರಕ್ಕೆ ಶಿಫಾರಸು ಮಾಡಿದೆ. ಸಮಾವೇಶದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಮಸೂದೆಯನ್ನು ಚಳಿಗಾಲ ಅಧಿವೇಶನದಲ್ಲಿ ಮಂಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.
ಸಮಿತಿಯ ಪ್ರಮುಖರಾದ ವಿಜಯಕುಮಾರ ಹಿಪ್ಪಳಗಾಂವ್, ಸ್ವಾಮಿದಾಸ ಮೇಘಾ, ರಾಜಕುಮಾರ ಟಿಳೇಕರ್, ಕಮಲಾಕರ್ ಹೆಗಡೆ, ರವಿ ನಿಜಾಂಪುರೆ, ಜಯಶೀಲ, ಡೇವಿಡ್ ಸುದ್ದಿಗೋಷ್ಠಿಯಲ್ಲಿ ಇದ್ದರು.