ಬೀದರ್: ಬೀದರ್ ಸರಹದ್ದಿನಿಂದ ಜಹೀರಾಬಾದ್ ಮಾರ್ಗವಾಗಿ ಹೈದರಾಬಾದ್ಗೆ ಸಂಪರ್ಕ ಕಲ್ಪಿಸುವ ಹಾಳಾದ ರಾಜ್ಯ ಹೆದ್ದಾರಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಬಿ.ಜಿ. ಶೆಟಕಾರ್ ಒತ್ತಾಯಿಸಿದ್ದಾರೆ.
ತೆಲಂಗಾಣದ ಪ್ರಮುಖ ವ್ಯಾಪಾರ ಕೇಂದ್ರವಾದ ಹೈದರಾಬಾದ್ಗೆ ತೆರಳಲು ಇರುವ ಏಕೈಕ ಹೆದ್ದಾರಿ ಸಂಪೂರ್ಣ ಹಾಳಾಗಿರುವ ಕಾರಣ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ ಎಂದು ಜಹೀರಾಬಾದ್ ಶಾಸಕ ಕೆ. ಮಾಣಿಕರಾವ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಈ ಮಾರ್ಗದಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆ ಮಧ್ಯೆ ತಗ್ಗು ದಿನ್ನೆಗಳು ಸೃಷ್ಟಿಯಾಗಿರುವುದರಿಂದ ಬೀದರ್ನಿಂದ ಸರಕು ಸಾಗಣೆ ಮಾಡುವ ಭಾರಿ ವಾಹನಗಳ ಸುಗಮ ಸಂಚಾರಕ್ಕೆ ತೊಡಕಾಗುತ್ತಿದೆ ಎಂದು ಹೇಳಿದ್ದಾರೆ.
ಹಾಳಾದ ರಸ್ತೆ ವಾಹನ ಅಪಘಾತ, ಸಮಯದ ಅಪವ್ಯಯ ಹಾಗೂ ಪ್ರಾಣ ಹಾನಿಗೂ ದಾರಿ ಮಾಡಿಕೊಡುತ್ತಿದೆ. ಬೀದರ್ನ ವ್ಯಾಪಾರ, ಕೈಗಾರಿಕೆ ಹಾಗೂ ಇತರ ವರ್ಗದ ಮೇಲೂ ಇದರ ಪರಿಣಾಮ ಆಗುತ್ತಿದೆ ಎಂದು ತಿಳಿಸಿದ್ದಾರೆ. ಸುಗಮ ವಾಹನ ಸಂಚಾರಕ್ಕಾಗಿ ಕೂಡಲೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.