ಬೀದರ್: ‘ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ. ಅವರು ಯಾವ ಪಕ್ಷದಲ್ಲಿದ್ದರೂ ನಮ್ಮ ನಾಯಕರು. ಇದರಲ್ಲಿ ಎರಡು ಮಾತಿಲ್ಲ. ಆದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಎಷ್ಟು ಗಂಡಸರಿದ್ದಾರೆ ಎನ್ನುವುದು ನಮಗೆ ಗೊತ್ತಿದೆ’ ಎಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿ ಸಮೀಪದ ಕಾರಂಜಾ ಜಲಾಶಯ ವೀಕ್ಷಿಸಿದ ನಂತರ ಮಾಧ್ಯಮ ಪ್ರತಿನಿಧಿಗಳು ‘ಡಿ.ಕೆ.ಶಿವಕುಮಾರ ಅವರು ಮುಂದಿನ ದಿನಗಳಲ್ಲಿ ಬಿಜೆಪಿ ಮುಕ್ತ ಕರ್ನಾಟಕ ಮಾಡುತ್ತೇನೆ’ ಎಂದು ಹೇಳಿದ್ದಾರೆ. ಅದಕ್ಕೆ ನಿಮ್ಮ ಪ್ರತಿಕ್ರಿಯೆ ಏನು ಎಂದು ಪ್ರಶ್ನಿಸಿದಾಗ ಮೇಲಿನಂತೆ ಉತ್ತರಿಸಿದರು.
‘ನಾನು ನೀರಾವರಿ ಯೋಜನೆಗಳ ಕಾಮಗಾರಿ ವೀಕ್ಷಣೆಗೆ ಇಲ್ಲಿಗೆ ಬಂದಿದ್ದೇನೆ. ಕಾಂಗ್ರೆಸ್ಸಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಇಲ್ಲಿನ ಶಾಸಕರಿಗೆ ಕೇಳಿ. ರಾಜಕೀಯ ಕುರಿತು ಇನ್ನೊಂದು ದಿನ ಚರ್ಚಿಸೋಣ’ ಎಂದು ಹೇಳಿ ಮುಂದೆ ಸಾಗಿದರು.