ಬೀದರ್: ಶಿವನಗರ (ಉತ್ತರ), ನ್ಯೂ ಆದರ್ಶ ಕಾಲೊನಿ, ಅಲ್ಲಮಪ್ರಭುನಗರ, ಬಸವನಗರ ಸೇರಿ ಒಟ್ಟು ಆರು ಪ್ರದೇಶಗಳನ್ನು ಸೂಕ್ಷ್ಮ ಕಂಟೈನ್ಮೆಂಟ್ ವಲಯ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿರಾಮಚಂದ್ರನ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ವಿಡಿಯೊ ಸಂವಾದ ಸಭಾಂಗಣದಲ್ಲಿ ಮಂಗಳವಾರ ವಿಡಿಯೊ ಸಂವಾದ ನಡೆಸಿ ಅವರು ಮಾತನಾಡಿದರು.
‘ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್ಗಳ ಸಂಖ್ಯೆಗಳನ್ನು ಇನ್ನಷ್ಟು ಹೆಚ್ಚಿಸಬೇಕು. ಎಲ್ಲ ತಾಲ್ಲೂಕುಗಳಲ್ಲಿ ಕಡ್ಡಾಯ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಪ್ರಕ್ರಿಯೆಯನ್ನು ತೀವ್ರಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
‘ನಾವು ಜಾಗೃತರಾಗದಿದ್ದರೆ ಮುಂದಿನ 45 ದಿನಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್ ಗಂಭೀರ ಸ್ವರೂಪ ಪಡೆಯಲಿದೆ. ಮೇ 15ರ ವರೆಗೆ ಕೋವಿಡ್ ತಡೆ ಕಾರ್ಯಾಚರಣೆ ಯಲ್ಲಿ ಪ್ರತಿಯೊಬ್ಬರೂ ಭಾಗಿಯಾಗಬೇಕು. ಕಚೇರಿಗಳಲ್ಲಿ ಅತಿ ಮಹತ್ವದ ಕೆಲಸಗಳಿಗೆ ಮಾತ್ರ ಎರಡನೇ ಆದ್ಯತೆ ನೀಡಿ ಅದನ್ನು ನಿರ್ವಹಣೆ ಮಾಡಬೇಕು’ ಎಂದು ಸಲಹೆ ಮಾಡಿದರು.
‘ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಗಳಲ್ಲಿ ವೈದ್ಯಾಧಿಕಾರಿಗಳು ಮತ್ತು ಇನ್ನಿತರ ಸಿಬ್ಬಂದಿ ಒಂದು ತಂಡವಾಗಿ ಕಾರ್ಯನಿರ್ವಹಿಸಬೇಕು. ಪ್ರತಿಯೊಬ್ಬ ರಿಗೂ ಕೆಲಸವನ್ನು ಸಮರ್ಪಕವಾಗಿ ಹಂಚಿಕೆ ಮಾಡಿ ಅದರ ಪರಿಶೀಲನೆ ನಡೆಸಿದಲ್ಲಿ ಎಲ್ಲ ಕೆಲಸಗಳು ಸುಗಮವಾಗಿ ನಡೆಯಲು ಸಾಧ್ಯ’ ಎಂದರು.
‘ಕೋವಿಡ್ ಆಸ್ಪತ್ರೆಗಳಲ್ಲಿ ಸಮರ್ಪಕ ರೀತಿಯಲ್ಲಿ ಬೆಡ್ ವ್ಯವಸ್ಥೆ ಇಲ್ಲ ಎಂದು ದೂರು ಬರದಂತೆ ಎಚ್ಚರವಹಿಸಬೇಕು. ತಾಲ್ಲೂಕು ಆಸ್ಪತ್ರೆಗಳಲ್ಲೂ ಕೋವಿಡ್ ಹಾಸಿಗೆಗಳು, ಆಕ್ಸಿಜನ್ ಹಾಗೂ ರೆಮ್ಡಿಸಿವಿರ್ ಇಂಜಕ್ಷನ್ ಇದೆ ಎನ್ನುವ ಮಾಹಿತಿ ಸಾರ್ವಜನಿಕರಿಗೆ ತಲುಪಿಸುವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಡಿಎಚ್ಒ ಡಾ. ವಿ.ಜಿ.ರೆಡ್ಡಿ ಇದ್ದರು.