ಬೀದರ್: ನಗರದ ಪ್ರತಾಪನಗರದಲ್ಲಿ ಇರುವ ಜನಸೇವಾ ಶಿಶು ಮಂದಿರ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಬುಧವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಮಾತೆಯರು ಗೋವಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶ್ರೀಕೃಷ್ಣನ ತೊಟ್ಟಿಲು, ಭಕ್ತಿ ಗೀತಾ ಗಾಯನ ಮತ್ತಿತರ ಕಾರ್ಯಕ್ರಮಗಳು ಜರುಗಿದವು. ಶ್ರೀಕೃಷ್ಣ ಹಾಗೂ ರಾಧೆಯ ವೇಷ ಧರಿಸಿದ್ದ ಇಬ್ಬರು ಚಿಣ್ಣರು ಎಲ್ಲರ ಗಮನ ಸೆಳೆದರು.
ಶಾಲೆಯ ಆಡಳಿತಾಧಿಕಾರಿ ಸೌಭಾಗ್ಯವತಿ ಮಾತನಾಡಿ, ‘ಕೊರೊನಾ ಸೋಂಕಿನ ಕಾರಣ ಈ ಬಾರಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲಾಗಿದೆ’ ಎಂದು ತಿಳಿಸಿದರು.
‘ಶ್ರೀಕೃಷ್ಣ ಸತ್ಯ ಹಾಗೂ ಧರ್ಮದ ರಕ್ಷಕನಾಗಿದ್ದಾನೆ. ಹೀಗಾಗಿ ಪ್ರತಿಯೊಬ್ಬರೂ ಶ್ರೀಕೃಷ್ಣನ ತತ್ವಗಳನ್ನು ಪಾಲಿಸಬೇಕು’ ಎಂದು ಹೇಳಿದರು.
‘ಶ್ರೀಕೃಷ್ಣ ಹಾಗೂ ಮಹಾ ಪುರುಷರ ಜಯಂತಿಗಳ ಆಚರಣೆಯಿಂದ ಮಕ್ಕಳಿಗೆ ಭಾರತೀಯ ಶ್ರೇಷ್ಠ ಸಂಸ್ಕೃತಿಯನ್ನು ಅರಿಯಲು ಸಾಧ್ಯವಾಗುತ್ತದೆ. ಸುಸಂಸ್ಕೃತ ಪ್ರಜೆಯಾಗಿ ರೂಪುಗೊಳ್ಳಲು ಸಹ ನೆರವಾಗುತ್ತದೆ’ ಎಂದು ತಿಳಿಸಿದರು.
‘ಶಾಲೆಯಲ್ಲಿ 16 ವರ್ಷಗಳಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಶ್ರೀಕೃಷ್ಣನ ಸಂದೇಶಗಳನ್ನು ಎಲ್ಲರಿಗೂ ತಲುಪಿಸುವುದೇ ಇದರ ಉದ್ದೇಶ ಆಗಿದೆ’ ಎಂದು ಹೇಳಿದರು.
‘ಶಾಲೆಯಲ್ಲಿ ಮಕ್ಕಳಿಗೆ ಭಾರತೀಯ ಸಂಸ್ಕೃತಿ ಆಧಾರಿತ ಶಿಕ್ಷಣ ಕೊಡಲಾಗುತ್ತಿದೆ. ನೈತಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಹೇಳಿಕೊಡಲಾಗುತ್ತಿದೆ. ಮಕ್ಕಳನ್ನು ಆದರ್ಶ ಪ್ರಜೆಗಳನ್ನಾಗಿ ರೂಪಿಸಲು ಸರ್ವ ಪ್ರಯತ್ನ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.
ಮುಖ್ಯ ಶಿಕ್ಷಕಿ ನೀಲಮ್ಮ ಚಾಮರೆಡ್ಡಿ ಸ್ವಾಗತಿಸಿದರು. ಬಸಮ್ಮ ವಂದಿಸಿದರು.