ಬಸವಕಲ್ಯಾಣ: ‘ತಾಲ್ಲೂಕಿನ ಎಲ್ಲ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ಧತೆ ಕೈಗೊಳ್ಳಬೇಕು. ಕೋವಿಡ್ ಹರಡದಂತೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಬೇಕು’ ಎಂದು ಶಾಸಕ ಬಿ.ನಾರಾಯಣರಾವ್ ಸಲಹೆ ನೀಡಿದರು.
ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
‘ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅವ್ಯವಸ್ಥೆ ಇರಬಾರದು. ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಬೇಕು. ತಾಲ್ಲೂಕಿನ ಫಲಿತಾಂಶ ಈ ಸಲ ಹೆಚ್ಚಿನ ಪ್ರಮಾಣದಲ್ಲಿ ಬರುವಂತೆ ಪ್ರಯತ್ನಿಸಬೇಕು’ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಬಸಪ್ಪ ಹಳ್ಳದ್ ಮಾತನಾಡಿ, ‘ತಾಲ್ಲೂಕಿನಲ್ಲಿ ಜೂನ್ 25 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಒಟ್ಟು 5468 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವರು. ಕೋವಿಡ್ ರೋಗದ ಹಿನ್ನೆಲೆಯಲ್ಲಿ ಅನ್ಯ ಜಿಲ್ಲೆಗಳಲ್ಲಿ ವ್ಯಾಸಂಗ ಮಾಡುವ ಸ್ಥಳೀಯ ವಿದ್ಯಾರ್ಥಿಗಳಿಗಾಗಿಯೂ ಪರೀಕ್ಷೆಗೆ ಕುಳಿತುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟು 19 ಮುಖ್ಯ ಕೇಂದ್ರಗಳಲ್ಲಿ ಹಾಗೂ 5 ಉಪ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುವುದು’ ಎಂದು ತಿಳಿಸಿದರು.
ತಹಶೀಲ್ದಾರ್ ಸಾವಿತ್ರಿ ಸಲಗರ ಮಾತನಾಡಿ, ‘ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅಂತರ ಕಾಯ್ದುಕೊಳ್ಳುವಂತೆ ಹಾಗೂ ಮಾಸ್ಕ್ ಉಪಯೋಗಿಸುವುದಕ್ಕೆ ವ್ಯವಸ್ಥೆ ಕಲ್ಪಿಸುವುದು ಅತ್ಯಗತ್ಯ’ ಎಂದರು.
ಇಒ ಮಡೋಳಪ್ಪ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಕಾಂತ ಕಿವಡೆ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಯೋಗರಾಜ ಕಹಳೆ ಉಪಸ್ಥಿತರಿದ್ದರು. ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕ, ಉಪ ಅಧೀಕ್ಷಕ ಹಾಗೂ ಅಭಿರಕ್ಷಕರು, ಶಿಕ್ಷಣ ಸಂಯೋಜಕರು ಪಾಲ್ಗೊಂಡಿದ್ದರು.