ಔರಾದ್: ‘ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಓದುವುದಕ್ಕೆ ಹಿಂದೇಟು ಹಾಕಬಾರದು. ಸರ್ಕಾರ ಅಂತಹ ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.
ಇಲ್ಲಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಗೆ ಬುಧವಾರ ಟ್ಯಾಬ್ ವಿತರಿಸಿ ಅವರು ಮಾತನಾಡಿದರು.
‘ಶಿಕ್ಷಣದ ವಿಷಯದಲ್ಲಿ ಸರ್ಕಾರ ಹೆಚ್ಚಿನ ಕಾಳಜಿ ವಹಿಸಿದೆ. ಈ ಪ್ರಯುಕ್ತ ರಾಜ್ಯದ ತಾಂತ್ರಿಕ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಿಸಲಾಗುತ್ತಿದೆ’ ಎಂದು ಅವರು ತಿಳಿಸಿದರು.
‘ನಮ್ಮ ತಾಲ್ಲೂಕಿನ ವಿದ್ಯಾರ್ಥಿಗಳು ಮುಂದೆ ಬರಬೇಕು. ಇಲ್ಲಿಯ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ಸಿಗಬೇಕು ಎಂಬ ಕಾರಣದಿಂದ ತಾವು ಮೊದಲ ಬಾರಿಗೆ ಶಾಸಕರಾದ ನಂತರ ಪಾಲಿಟೆಕ್ನಿಕ್ ಕಾಲೇಜು ಮಂಜೂರು ಮಾಡಿಸಿದ್ದೇನೆ’ ಎಂದು ಹೇಳಿದರು.
‘ಆರ್ಥಿಕ ತೊಂದರೆ ಎದುರಿಸುವ ಬಡ ವಿದ್ಯಾರ್ಥಿಗಳಿಗೆ ವೈಯಕ್ತಿಕ ನೆರವು ನೀಡಲು ನಾನು ಸದಾ ಸಿದ್ಧ. ಅಂತಹ ವಿದ್ಯಾರ್ಥಿಗಳ ಪಾಲಕರು ನೇರವಾಗಿ ನನ್ನನ್ನು ಸಂಪರ್ಕಿಸಬಹುದು’ ಎಂದು ಸಚಿವರು ತಿಳಿಸಿದರು.
ಪ್ರಾಂಶುಪಾಲ ವಿಜಯಕುಮಾರ ಜಾಧವ್ ಮಾತನಾಡಿ, ‘ಪಾಲಿಟೆಕ್ನಿಕ್ ಒಟ್ಟು 66 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳ ಓದಿಗೆ ತುಂಬಾ ಅನುಕೂಲವಾಗಲಿದೆ’ ಎಂದು ಹೇಳಿದರು.