ಭಾಲ್ಕಿ: ‘ಜ್ಞಾನರ್ಜನೆ, ಶೈಕ್ಷಣಿಕ ಮಾಹಿತಿ ಹೆಚ್ಚಾಗಿ ತಿಳಿದುಕೊಳ್ಳಲು ತಂತ್ರಜ್ಞಾನದ ಮೊರೆ ಹೋಗುವುದು ಅನಿವಾರ್ಯ. ಹಾಗಾಗಿ ವಿದ್ಯಾರ್ಥಿಗಳು ಟ್ಯಾಬ್ ಪಿಸಿಗಳನ್ನು ಅನ್ಯ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳದೇ ಶೈಕ್ಷಣಿಕ ಚಟುವಟಿಕೆಗಳಿಗೆ ಬಳಸಬೇಕು’ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.
ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಬುಧವಾರ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಟ್ಯಾಬ್ ಪಿಸಿಗಳನ್ನು ವಿತರಿಸಿ, ಸ್ಮಾರ್ಟ್ ಕ್ಲಾಸ್ ರೂಂ ಉದ್ಘಾಟಿಸಿ ಮಾತನಾಡಿದರು.
‘ಕೆಲವು ಕಡೆಗಳಲ್ಲಿ ಪದವಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಟ್ಯಾಬ್ ಪಿಸಿ ವಿತರಿಸಿರುವ ಬಗ್ಗೆ ಮಾಹಿತಿ ಇದೆ. ಆದರೆ, ನಮ್ಮ ಭಾಗದ ವಿದ್ಯಾರ್ಥಿಗಳಿಗೆ ಟ್ಯಾಬ್ ಪಿಸಿ ನೀಡದೇ ಅನ್ಯಾಯ ಮಾಡಲಾಗಿದೆ’ ಎಂದು ಆರೋಪಿಸಿದರು.
‘ಸರ್ಕಾರ ತಕ್ಷಣ ಪದವಿ ದ್ವಿತೀಯ ವಿದ್ಯಾರ್ಥಿಗಳಿಗೂ ಟ್ಯಾಬ್ ಪಿಸಿ ನೀಡುವಂತೆ’ ಒತ್ತಾಯಿಸಿದರು.
ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಪ್ರಾಚಾರ್ಯ ಮಲ್ಲಿಕಾರ್ಜುನ ಕಾಂಬಳೆ ಇದ್ದರು. ಮಾರುತಿ ಕರಂಜೆ ನಿರೂಪಿಸಿದರು.