ಬೀದರ್: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಹಾಗೂ ಮರಳು ಸಾಗಣೆ ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ (ಗಣಿ), ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸನ್ಸ್ ನೀಡಿಕೆ ಮತ್ತು ನಿಯಂತ್ರಣ ಪ್ರಾಧಿಕಾರ ಹಾಗೂ ಜಿಲ್ಲಾ ಮರಳು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನತೆಗೆ ಅನುಕೂಲವಾಗುವಂತೆ ಮಾಂಜ್ರಾ ನದಿಯಲ್ಲಿ ಮರಳು ನಿಕ್ಷೇಪಗಳನ್ನು ಗುರುತಿಸಬೇಕು ಎಂದು ತಿಳಿಸಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಹೊಸದಾಗಿ ಕಲ್ಲುಪುಡಿ ಮಾಡುವ ಘಟಕಗಳ ಸ್ಥಾಪನೆಗೆ ಜಂಟಿ ಸ್ಥಳ ಪರಿಶೀಲನೆ ನಡೆಸಿ, ಶಿಫಾರಸು ಮಾಡಲಾದ ಅರ್ಜಿಗಳನ್ನು ಸುರಕ್ಷಿತ ವಲಯ ಎಂದು ಘೋಷಿಸಿ, ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಲು ಫಾರಂ ಬಿ 1 ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಹಿರಿಯ ಭೂವಿಜ್ಞಾನಿ ರೋಹಿತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ತಹಶೀಲ್ದಾರ್ ಗಂಗಾದೇವಿ ಸಿ.ಎಚ್ ಹಾಜರಿದ್ದರು.